ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಗುರುಕುಲ ವಸತಿ ಶಾಲೆಯಲ್ಲಿ ನಡೆದ ಭೀಕರ ಘಟನೆ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮಂಚದ ಕಬ್ಬಿಣದ ರಾಡ್ ತೆಗೆದುಕೊಂಡು ಸಹ ವಿದ್ಯಾರ್ಥಿಗಳ ಮೇಲೆ ನಡೆಸಿದ ಭೀಕರ ಹಲ್ಲೆ ನಡೆಸಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ವಾರ್ಡನ್ ಸೇರಿದಂತೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ. ಮಾಹಿತಿ ಪ್ರಕಾರ, ರಾತ್ರಿ ಊಟದ ಬಳಿಕ ಎಲ್ಲ ವಿದ್ಯಾರ್ಥಿಗಳು ತಮ್ಮ ಹಾಸಿಗೆಗಳಲ್ಲಿ ಮಲಗಿಕೊಂಡಿದ್ದ ವೇಳೆ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಂಚದ ರಾಡ್ ತೆಗೆದುಕೊಂಡು ಸಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸಿದ ವಿದ್ಯಾರ್ಥಿ ಅಲ್ಲಿ ಮಲಗಿದ್ದ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ರಾಡ್ನಿಂದ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ. ಇದರಿಂದ ಎಂಟು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮವಾಗಿ ಒಬ್ಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂಬುದು ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರನ್ನು ಬಳ್ಳಾರಿಯ ಬಿಮ್ಸ್ ಆಸ್ಪತ್ರೆ ಮತ್ತು ಟ್ರಾಮಾಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿದೆ.
ಘಟನೆ ನಡೆಯುವ ಸಂದರ್ಭದಲ್ಲಿ ಹಾಸ್ಟೆಲ್ನ ವಾರ್ಡನ್ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ, ದಾಳಿ ನಡೆಸಿದ ವಿದ್ಯಾರ್ಥಿ ವಾರ್ಡನ್ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ಹಲ್ಲೆಯಲ್ಲಿ ವಾರ್ಡನ್ ಕೂಡ ಗಾಯಗೊಂಡಿದ್ದಾರೆ.
ಹಲ್ಲೆ ನಡೆಸಿದ ಬಳಿಕ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬಳ್ಳಾರಿ ಬ್ರೂಸ್ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
