ಬೆಂಗಳೂರು ಆ.31: ಅಕ್ರಮ ವಲಸಿಗರ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯನ್ನು ಪೊಲೀಸರು ಮುಂದುವರಿಸಿದ್ದು, ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಇಂದು ಸೋಮವಾರ ಗಡಿಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಮಾಲ್ಡಾಗೆ ಕಳುಹಿಸಲಾಗಿದೆ.
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿರುವ ಶಂಕಿತ ವಲಸಿಗರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ವ್ಯಾಪ್ತಿಯ 10 ಪೊಲೀಸ್ ಠಾಣೆಗಳಲ್ಲಿ 31 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಅಗತ್ಯ ಕಾನೂನು ಪ್ರಕ್ರಿಯೆಗಳ ಬಳಿಕ ಅವರನ್ನು ಬೆಂಗಳೂರಿನಿಂದ ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ.
ಪೊಲೀಸ್ ಉಪ ಆಯುಕ್ತ (ಎಲೆಕ್ಟ್ರಾನಿಕ್ ಸಿಟಿ) ಎಂ. ನಾರಾಯಣ ಅವರ ಮಾಹಿತಿ ಪ್ರಕಾರ, ಸೋಮವಾರ ಈ 31 ಮಂದಿಯನ್ನು SMVT ಬೆಂಗಳೂರು ಟರ್ಮಿನಲ್ನಿಂದ ಮಾಲ್ಡಾ ರೈಲು ನಿಲ್ದಾಣಕ್ಕೆ ಕರೆದೊಯ್ಯಲಾಗಿದೆ. ಗಡೀಪಾರು ಪ್ರಕ್ರಿಯೆಯ ಭಾಗವಾಗಿ ಅವರನ್ನು ಸುಮಾರು 20 ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ರೈಲಿನಲ್ಲಿ ಕಳುಹಿಸಲಾಗಿದೆ.
ಪೊಲೀಸರ ಪ್ರಕಾರ, 31 ಮಂದಿ ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ. ಅಲ್ಲಿಗೆ ತಲುಪಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ.
ಇದರ ನಡುವೆ, ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲು ಸಾರ್ವಜನಿಕರ ಸಹಕಾರವನ್ನು ಪೊಲೀಸರು ಕೋರಿದ್ದಾರೆ. ಶಂಕಿತ ಅಕ್ರಮ ವಲಸಿಗರ ಕುರಿತು ಮಾಹಿತಿ ಲಭ್ಯವಿದ್ದರೆ ಪೊಲೀಸರಿಗೆ ತಿಳಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮನವಿ ಮಾಡಿದ್ದಾರೆ.
ಆದರೆ, ಸಾರ್ವಜನಿಕರು ಯಾವುದೇ ಸಂದರ್ಭದಲ್ಲೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ಪೊಲೀಸ್ ಇಲಾಖೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಅಕ್ರಮ ವಲಸಿಗರ ಕುರಿತು ಮಾಹಿತಿ ನೀಡುವುದು ಮತ್ತು ಅವರನ್ನು ಗುರುತಿಸುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾದರೂ, ಸಂಪೂರ್ಣ ಪ್ರಕ್ರಿಯೆ ಕಾನೂನಿನ ಚೌಕಟ್ಟಿನಲ್ಲೇ ನಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವವರ ಕುರಿತು ಪರಿಶೀಲನೆ ಮತ್ತು ಗುರುತಿಸುವ ಕಾರ್ಯ ಮುಂದುವರಿಯಲಿದೆ. ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯ ಮೂಲಕ ಶಂಕಿತ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ, ಅವರ ದಾಖಲೆಗಳನ್ನು ಪರಿಶೀಲಿಸಿ, ಕಾನೂನುಬದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ನಗರದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





