ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ‘ಕಾನ್ಫಿಡೆಂಟ್ ಗ್ರೂಪ್’ (Confident Group) ಮುಖ್ಯಸ್ಥ ಸಿ.ಜೆ. ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಅವರ ಐಷಾರಾಮಿ ನಿವಾಸದಲ್ಲೇ ಈ ಘೋರ ದುರಂತ ಸಂಭವಿಸಿದೆ.
ಘಟನೆಯ ಹಿನ್ನೆಲೆ:
ನಗರದ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ತಮ್ಮ ಬಂಗಲೆಯಲ್ಲಿ ಸಿ.ಜೆ. ರಾಯ್ ಅವರು ಇಂದು ಇದ್ದಕ್ಕಿದ್ದಂತೆ ತಮ್ಮ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ಸಮಯದಿಂದ ಕಾನ್ಫಿಡೆಂಟ್ ಗ್ರೂಪ್ ಮತ್ತು ಸಿ.ಜೆ. ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ನಿರಂತರವಾಗಿ ಕಣ್ಣಿಟ್ಟಿದ್ದರು. ಕಳೆದ ಕೆಲವು ದಿನಗಳಲ್ಲಿ ಅವರ ಕಚೇರಿ ಹಾಗೂ ಮನೆಗಳ ಮೇಲೆ ಪದೇ ಪದೇ ಐಟಿ ದಾಳಿಗಳು ನಡೆದಿದ್ದವು. ಅಚ್ಚರಿಯ ಸಂಗತಿಯೆಂದರೆ, ಇಂದೂ ಕೂಡ ಐಟಿ ಅಧಿಕಾರಿಗಳು ಅವರ ಮನೆಗೆ ಪರಿಶೀಲನೆಗಾಗಿ ಆಗಮಿಸಿದ್ದರು.
ಅಧಿಕಾರಿಗಳು ಮನೆಯಲ್ಲಿದ್ದಾಗಲೇ ಅಥವಾ ದಾಳಿಯ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಐಟಿ ಅಧಿಕಾರಿಗಳ ನಿರಂತರ ವಿಚಾರಣೆ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಭೀತಿಯಿಂದ ರಾಯ್ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಪೊಲೀಸ್ ತನಿಖೆ ಚುರುಕು
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಶೋಕ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪಿಸ್ತೂಲ್ ವಶಕ್ಕೆ ಪಡೆಯಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಾಯ್ ಅವರು ಮರಣಪತ್ರ (Death Note) ಏನಾದರೂ ಬರೆದಿಟ್ಟಿದ್ದಾರೆಯೇ ? ಅಥವಾ ಈ ಆತ್ಮಹತ್ಯೆಯ ಹಿಂದೆ ಬೇರೆ ಯಾವುದಾದರೂ ಒತ್ತಡಗಳಿವೆಯೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು ಮತ್ತು ಕೇರಳದಲ್ಲಿ ಬೃಹತ್ ರಿಯಲ್ ಎಸ್ಟೇಟ್ ಸಾಮ್ರಾಜ್ಯವನ್ನು ಹೊಂದಿದ್ದ ಸಿ.ಜೆ. ರಾಯ್, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅಪಾರ ಬೆಂಬಲ ನೀಡುತ್ತಿದ್ದರು. ಇವರ ಸಾವಿಗೆ ನಿಖರ ಕಾರಣವೇನು ಎಂಬುದನ್ನ ತಬಿಖೆ ಬಳಿಕ ತಿಳಿಯಬೇಕಿದೆ.





