ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯು ತನ್ನ ಸುಪರ್ದಿಗೆ ತೆಗೆದುಕೊಂಡಿರುವ ಕ್ರಮವನ್ನು ಪ್ರಶ್ನಿಸಿ ದೇವಸ್ಥಾನದ ಟ್ರಸ್ಟ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಈ ಅರ್ಜಿಯ ಬಗ್ಗೆ ಜುಲೈ 16ಕ್ಕೆ ಆದೇಶವನ್ನು ಕಾಯ್ದಿರಿಸಿದೆ.
ಈ ಪ್ರಕರಣದ ತುರ್ತು ವಿಚಾರಣೆಗೆ ಕೋರಿ ಟ್ರಸ್ಟ್ ಜುಲೈ 14ರಂದು ಅರ್ಜಿಯನ್ನು ಸಲ್ಲಿಸಿತ್ತು. ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನಕುಮಾರ್ ಅವರು, ಮುಜರಾಯಿ ಇಲಾಖೆಯು ತರಾತುರಿಯಲ್ಲಿ ದೇವಸ್ಥಾನವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಎಂದು ವಾದಿಸಿದರು. “ಎರಡನೇ ಶನಿವಾರದ ರಜೆ ದಿನದಂದು ಈ ಕ್ರಮ ಕೈಗೊಳ್ಳಲಾಗಿದೆ. ಇದು ಕಾನೂನುಬಾಹಿರವಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು” ಎಂದು ಕೋರ್ಟ್ಗೆ ಮನವಿ ಮಾಡಿದರು.
ಇದಕ್ಕೆ ಪ್ರತಿವಾದವಾಗಿ, ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್ ದೇವದಾಸ್ ಅವರು, ದೇವಸ್ಥಾನದ ಟ್ರಸ್ಟ್ನಲ್ಲಿ ಆರ್ಥಿಕ ಅಕ್ರಮಗಳು ನಡೆದಿರುವ ಬಗ್ಗೆ ಹಲವು ದೂರುಗಳು ಬಂದಿವೆ ಎಂದು ತಿಳಿಸಿದರು. “ದೇವಾಲಯದ ಹುಂಡಿ ಹಣ ಎಣಿಕೆ ವೇಳೆ ಕಳವು ಮಾಡಿದ ದೃಶ್ಯಗಳು CCTV ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಗಳು ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇದರಿಂದ ಟ್ರಸ್ಟ್ನ ಪಾರದರ್ಶಕತೆಯ ಕೊರತೆ ಸ್ಪಷ್ಟವಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಆದೇಶವನ್ನು ಜುಲೈ 16ಕ್ಕೆ ಕಾಯ್ದಿರಿಸಿದೆ.
ವಿವಾದದ ಹಿನ್ನೆಲೆ
ಗಾಳಿ ಆಂಜನೇಯ ದೇವಸ್ಥಾನವು ಬೆಂಗಳೂರಿನ ಐತಿಹಾಸಿಕ ದೇಗುಲಗಳಲ್ಲಿ ಒಂದಾಗಿದ್ದು, ಇದರ ನಿರ್ವಹಣೆಯಲ್ಲಿ ಟ್ರಸ್ಟ್ ಪಾರದರ್ಶಕತೆ ಕಾಪಾಡಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ವೇಳೆ ಕೆಲವರು ಕಳವು ಮಾಡಿದ್ದ ದೃಶ್ಯ CCTVಯಲ್ಲಿ ಸೆರೆಯಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಟೀಕೆಗೆ ಗುರಿಯಾಗಿತ್ತು. ದೇವಾಲಯದ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವೂ ಎದ್ದಿತ್ತು.
ಈ ಆರೋಪಗಳ ಹಿನ್ನೆಲೆಯಲ್ಲಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅಡಿಯಲ್ಲಿ ದೇವಸ್ಥಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2024ರ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಕೋರಿದ್ದರು.
ಅದರಂತೆ, ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಉಪ ಆಯುಕ್ತರು 2025ರ ಏಪ್ರಿಲ್ 25ರಂದು ಈ ದೇವಸ್ಥಾನವನ್ನು ಅಧಿಸೂಚಿತ ಸಂಸ್ಥೆಯೆಂದು ಘೋಷಿಸಿ, ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ವಿಚಾರಣೆಯನ್ನು ಅಪರ ಜಿಲ್ಲಾಧಿಕಾರಿಗಳ ಕೋರ್ಟ್ನಲ್ಲಿ ನಡೆಸಿದ್ದರು. ಈ ವಿಚಾರಣೆಯ ವರದಿಯನ್ನು ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಲಾಗಿತ್ತು.





