ಬೆಂಗಳೂರು, ಫೆಬ್ರವರಿ 14: ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ಮಕ್ಕಳಿಗೆ ಚಾಕೊಲೇಟ್ ನೀಡಿ ಕರೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಆತ ಮಕ್ಕಳ ಭುಜದ ಮೇಲೆ ಕೈ ಹಾಕಿ ಚಾಕೊಲೇಟ್ ನೀಡಲು ಯತ್ನಿಸಿರುವ ಘಟನೆ ಎರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ.
ರೆಸಿಡೆನ್ಸಿ ರಸ್ತೆಯಲ್ಲಿ ನಡೆದ ಘಟನೆ
ಬೆಂಗಳೂರಿನಲ್ಲಿ ನಗರದ ಪ್ರತಿಷ್ಠಿತ ಬಿಶಪ್ ಕಾಟನ್ ಬಾಲಕರ ಶಾಲೆ ಬಳಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ರೆಸಿಡೆನ್ಸಿ ರಸ್ತೆಯಲ್ಲಿರುವ ಶಾಲೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಮಕ್ಕಳಿಗೆ ಚಾಕೊಲೇಟ್ ನೀಡಲು ಯತ್ನಿಸಿದ್ದಾನೆ. ವಿದ್ಯಾರ್ಥಿಯೊಬ್ಬನ ಭುಜದ ಮೇಲೆ ಕೈ ಹಾಕಿ ಚಾಕೊಲೇಟ್ ನೀಡಲು ಮುಂದಾದಾಗ, ಬಾಲಕ ಶಂಕಿತ ವ್ಯಕ್ತಿಯಿಂದ ತಪ್ಪಿಸಿಕೊಂಡು ಶಾಲೆಯೊಳಗೆ ಓಡಿ ಹೋಗಿದ್ದಾನೆ. ಚಾಕೊಲೇಟ್ ನಿರಾಕರಿಸಿದ ಬಾಲಕನನ್ನು ಹಿಡಿಯಲು ಆತ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಶಾಲಾ ವಾಹನದ ಚಾಲಕರ ಗಮನಕ್ಕೆ ಈ ವಿಚಾರ ಬರುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಆತನ ಗುರುತು ಪತ್ತೆಯಾಗಿಲ್ಲ. ಘಟನೆ ಬೆಳಕಿಗೆ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ತಕ್ಷಣವೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಲಾಗಿದೆ.
ಪೊಲೀಸರಿಂದ ತನಿಖೆ ಆರಂಭ
ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾಲೆಯ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬೀಸಲಾಗಿದೆ. ಈ ಘಟನೆಯು ಇತ್ತೀಚೆಗೆ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ನಡೆದ ಘಟನೆಗಳನ್ನು ನೆನಪಿಸುತ್ತಿದ್ದು, ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಘಟನೆಯ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿ ಪಾಲಕರಿಗೆ ಎಚ್ಚರಿಕೆ ಸುತ್ತೋಲೆ ಹೊರಡಿಸಿದೆ. ಶಾಲೆಗೆ ಮಕ್ಕಳನ್ನು ಕರೆತರುವ ಮತ್ತು ಬಿಡುವ ಸಮಯದಲ್ಲಿ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಅಪರಿಚಿತರ ಬಳಿ ಮಕ್ಕಳನ್ನು ಒಂಟಿಯಾಗಿ ಬಿಡದಂತೆ ಮನವಿ ಮಾಡಲಾಗಿದೆ. ಶಾಲಾ ವಾಹನಗಳ ಚಾಲಕರಿಗೂ ಮಕ್ಕಳ ಸುರಕ್ಷತೆ ಕುರಿತು ವಿಶೇಷ ಸೂಚನೆ ನೀಡಲಾಗಿದೆ.
ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ
ಶಾಲಾ ಆವರಣ ಅಥವಾ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ವ್ಯಕ್ತಿ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಜಾಗೃತರಾಗಿರಬೇಕು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.




