ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಛಾವಣಿ (1)

ಹಾವೇರಿ, ಸೆಪ್ಟೆಂಬರ್ 11: ಬರ ಮತ್ತು ಪ್ರವಾಹದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ಹೆಕ್ಟೇರ್‌ಗೆ ರೂ. 2,000 ಪರಿಹಾರ ನೀಡಲಾಗುತ್ತಿತ್ತು. ಆದರೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತವನ್ನು ರೂ.6,500ಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

ಮೋಡ ಬಿತ್ತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಈ ವಿಚಾರದಲ್ಲಿ ಮಾತನಾಡುತ್ತಿರುವವರು ತಮಗೆ ಹೆಚ್ಚಿನ ಜ್ಞಾನವಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

“ಅವರೆಲ್ಲಾ ಬಿಸಿನೆಸ್ ಸೈಂಟಿಸ್ಟ್‌ಗಳು. ಅವರಿಗೆ ಬಹಳ ಜ್ಞಾನ ಇದೆ. ಗೊತ್ತಾಗುತ್ತೆ?” ಎಂದು ಪ್ರಶ್ನಿಸಿದ ಅವರು, 2000ನೇ ಇಸವಿಯಲ್ಲಿನ ಮೋಡ ಬಿತ್ತನೆಗೆ ಸಂಬಂಧಿಸಿದ ಸಿಎಜಿ ವರದಿಯನ್ನು ತೆಗೆದು ನೋಡಲಿ ಎಂದು ಸಲಹೆ ನೀಡಿದರು.

ಮೋಡ ಬಿತ್ತನೆಯ ಹಿಂದಿನ ಅನುಭವಗಳು ಹಾಗೂ ಅದರ ಫಲಿತಾಂಶಗಳ ಕುರಿತು ಹಿಂದಿನ ವರದಿಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಾನಪದ ವಿಶ್ವವಿದ್ಯಾಲಯದ ಅಕ್ರಮದ ಬಗ್ಗೆ ತನಿಖೆಗೆ ಆಗ್ರಹ

ಶಿಗ್ಗಾವಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈ ವಿಚಾರವನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕು ಎಂದು ಹೇಳಿದರು.

“ ಈ ರೀತಿಯ ಅಕ್ರಮಗಳ ಕುರಿತು ಸಂಪೂರ್ಣವಾಗಿ ತನಿಖೆಯಾಗಬೇಕು. ಒಂದು ಬಾರಿ ಎಲ್ಲವನ್ನೂ ಸ್ವಚ್ಛ ಮಾಡಬೇಕು” ಎಂದು ಅವರು ಹೇಳಿದರು.

ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಆರೋಪಗಳು ಹಾಗೂ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ವಾಸ್ತವಾಂಶವನ್ನು ಹೊರತರಬೇಕು ಎಂಬ ನಿಲುವನ್ನು ಅವರು ವ್ಯಕ್ತಪಡಿಸಿದರು.

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಜಾರಕಿಹೊಳಿ ಅವರು ಈಗಾಗಲೇ ತಮ್ಮದೇ ಆದ ಉತ್ತರ ನೀಡಿದ್ದಾರೆ ಎಂದು ಹೇಳಿದರು.

“ಕೆಲವೆಲ್ಲ ತಾಂತ್ರಿಕ ಕಾರಣಗಳನ್ನು ಕೊಟ್ಟಿದ್ದಾರೆ. ಆದರೆ ಮುಖ್ಯಮಂತ್ರಿಗಳು ಇದನ್ನು ರಾಜಕಾರಣ ಮಾಡಲು ನೋಡುತ್ತಿದ್ದಾರೆ. ಅದು ಸಾಧ್ಯವಿಲ್ಲ” ಎಂದು ಬೊಮ್ಮಾಯಿ ಹೇಳಿದರು.

ಅಂತಿಮವಾಗಿ ಪ್ರಕರಣದಲ್ಲಿ ಏನಾದರೂ ಅಕ್ರಮ ಅಥವಾ ತಪ್ಪು ಕಂಡುಬಂದಿದ್ದರೆ, ಅದನ್ನು ನ್ಯಾಯಾಲಯವೇ ನಿರ್ಧರಿಸಲಿದೆ. ಹೀಗಾಗಿ ಮುಖ್ಯಮಂತ್ರಿ ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. 

 

Exit mobile version