ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸುತ್ತುವರಿದ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆಗೆ ಸಜ್ಜಾಗಿರುವ ಬೆನ್ನಲ್ಲೇ, ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಈ ಹಿಂದೆ ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೊರಟ್ಟಿ ಘೋಷಿಸಿದ್ದರು. ಆದರೆ ಇದೀಗ ರಾಜೀನಾಮೆ ನೀಡಲು ಇನ್ನಷ್ಟು ಸಮಯಾವಕಾಶ ಕೋರಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ಬೆಳವಣಿಗೆಯ ನಡುವೆಯೇ ಅವರು ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿದ್ದು, ಭೇಟಿ ಬಳಿಕ ಅಸಮಾಧಾನದ ಮನಸ್ಥಿತಿಯಲ್ಲೇ ಹೊರಬಂದ ದೃಶ್ಯಗಳು ಗಮನ ಸೆಳೆದಿವೆ.
ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೊನ್ನೆ ನಾನು ಏನು ಹೇಳಿದ್ದೇನೋ ಅದಕ್ಕೆ ಈಗಲೂ ಬದ್ಧನಿದ್ದೇನೆ. ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ಬಯಸಿದರೆ ಮಂಡಿಸಲಿ. ಕಾನೂನು ಪ್ರಕಾರ ಅವರಿಗೆ ಏನು ಮಾಡಬೇಕೋ ಅದನ್ನು ಮಾಡಲಿ ಎಂದರು.
ಇತ್ತ ಹೊರಟ್ಟಿ ರಾಜೀನಾಮೆ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸದಿರುವುದು ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ತಯಾರಿಯನ್ನು ಆಡಳಿತ ಪಕ್ಷ ವೇಗಗೊಳಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕರು ಬಸವರಾಜ ಹೊರಟ್ಟಿ ಸಭಾಪತಿಯಾಗಿ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಆರೋಪ ಮಾಡುತ್ತಿದ್ದಾರೆ. ಸಭಾಪತಿ ಸ್ಥಾನದಲ್ಲಿದ್ದು ಬಿಜೆಪಿ ನಾಯಕರೊಂದಿಗೆ ಚರ್ಚಿಸಿ ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂಬುದು ಅವರ ಪ್ರಮುಖ ಆಕ್ಷೇಪವಾಗಿದೆ. ಇದರ ಜೊತೆಗೆ, ವಿಧಾನ ಪರಿಷತ್ನ ಎಂಟು ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಹಾಗೂ ಆ ಪ್ರಕ್ರಿಯೆಯಲ್ಲಿ ಸಭಾಪತಿಯ ಪಾತ್ರವಿದೆ ಎಂಬ ಆರೋಪವನ್ನೂ ಕಾಂಗ್ರೆಸ್ ಮುಂದಿಟ್ಟಿದೆ.
ಈ ಎರಡು ಪ್ರಮುಖ ವಿಚಾರಗಳನ್ನು ಆಧಾರವಾಗಿಸಿಕೊಂಡು ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಸಂಬಂಧ ಅವಿಶ್ವಾಸ ನಿರ್ಣಯದ ನಿಲುವಳಿ ನೋಟಿಸ್ ಸಲ್ಲಿಸಲು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅಗತ್ಯ ದಾಖಲೆಗಳು ಹಾಗೂ ಸಹಿಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.
ವಿಧಾನ ಪರಿಷತ್ನಲ್ಲಿ ಈ ಬೆಳವಣಿಗೆಗಳು ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ಕೆಲ ದಿನಗಳಲ್ಲಿ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಪಡೆಯುವ ಸಾಧ್ಯತೆ ಇದೆ. ಹೊರಟ್ಟಿ ತಮ್ಮ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆಯೇ ಅಥವಾ ಕಾಂಗ್ರೆಸ್ ಅವಿಶ್ವಾಸ ನಿರ್ಣಯದ ಮೂಲಕ ಅವರನ್ನು ಎದುರಿಸುತ್ತದೆಯೇ ಎಂಬುದು ಇದೀಗ ರಾಜಕೀಯ ವಲಯದ ಕುತೂಹಲದ ಕೇಂದ್ರಬಿಂದುವಾಗಿದೆ.





