ಮಾಜಿ ಶಾಸಕ ಬಿ‌ ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಂತಾಪ

Untitled design 2026 08 19T094023.836

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 

67 ವರ್ಷದ ಬಿ.ಸಿ. ನಾಗೇಶ್ ಅವರು ಮಂಗಳವಾರ (ಆ.18) ಬೆಂಗಳೂರಿನಲ್ಲಿ ನಿಧನರಾದರು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತರಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂಎಲ್‌ಸಿ ಸಿ.ಟಿ. ರವಿ, ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ಅವರ ಪಾರ್ಥಿವ ಶರೀರವನ್ನು ತಿಪಟೂರಿನ ಸ್ವಗೃಹಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ.

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ತಮ್ಮ ಎಕ್ಸ್ ಖಾತೆಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಅನೇಕ ಗಣ್ಯರು ನಾಗೇಶ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಶ್ ಅವರನ್ನು ಅಜಾತಶತ್ರು ಎಂದು ಸ್ಮರಿಸಿದ್ದಾರೆ. ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದ ಅವರು ಪಕ್ಷದ ಸಂಘಟನೆ ಹಾಗೂ ಜನಸೇವೆಯಲ್ಲಿ ಸಕ್ರಿಯರಾಗಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಎಂಎಲ್‌ಸಿ ಸಿ.ಟಿ. ರವಿ ಮಾತನಾಡಿ, ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿಯಾಗಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನೂ ಮೀರಿ ಜನಪ್ರೀತಿ ಗಳಿಸಿದ್ದರು. ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿರುವ ನೋವು ಇದೆ ಎಂದು ಹೇಳಿದ್ದಾರೆ. ಶಾಸಕರಾಗುವ ಮುನ್ನವೇ ಎಬಿವಿಪಿ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನಾಗೇಶ್, ಕೊನೆಯವರೆಗೂ ಪಕ್ಷ ಮತ್ತು ಜನಸೇವೆಯಲ್ಲಿ ಸಕ್ರಿಯರಾಗಿದ್ದರು ಎಂದು ಸ್ಮರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಗೇಶ್ ಅವರನ್ನು ‘ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್’ ಎಂದು ಬಣ್ಣಿಸಿದ್ದಾರೆ. ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ಅವರು ಸಾಕಷ್ಟು ಶ್ರಮಿಸಿದ್ದರು. ವಿಶೇಷವಾಗಿ ನೀರಾವರಿ ಯೋಜನೆಗಳಿಗಾಗಿ ಹೆಚ್ಚಿನ ಕೆಲಸ ಮಾಡಿದ್ದರು ಎಂದು ಹೇಳಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾಗೇಶ್ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು ಎಂದು ಬೊಮ್ಮಾಯಿ ಸ್ಮರಿಸಿದ್ದಾರೆ. ಒಬ್ಬ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ, ಬಿಜೆಪಿಗೆ ಹಾಗೂ ರಾಜ್ಯಕ್ಕೆ ನೋವಿನ ಸಂಗತಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

Exit mobile version