ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು (ಡಿಸೆಂಬರ್ 9), ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಗಳ ಕಾವು ತಟ್ಟಿದೆ. ವಿರೋಧ ಪಕ್ಷವಾದ ಬಿಜೆಪಿ (BJP) ರೈತರ ಸಂಕಷ್ಟಗಳನ್ನು ಮುಂದಿಟ್ಟುಕೊಂಡು ಬೃಹತ್ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾನಿರತರನ್ನು ತಡೆದು, ಹಲವು ಪ್ರಮುಖ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಹಲವು ಹಿರಿಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೈತರ ಹಿತಾಸಕ್ತಿಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಬಿಜೆಪಿ ನಾಯಕರು ಮತ್ತು ರೈತರು ತಮ್ಮ ಹೋರಾಟವನ್ನು ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸುವುದರೊಂದಿಗೆ ಪ್ರಾರಂಭಿಸಿದರು. ಈ ಸಭೆಯಲ್ಲಿ ಸಾವಿರಾರು ರೈತರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಭೆಯ ನಂತರ, ಬಿಜೆಪಿ ನಾಯಕರು ಮತ್ತು ರೈತ ಮುಖಂಡರು ಒಗ್ಗೂಡಿ, ಮಾಲಿನಿ ಸಿಟಿ ಮೈದಾನದಿಂದ ಪಾದಯಾತ್ರೆ ಮೂಲಕ ಸುವರ್ಣಸೌಧದತ್ತ ಮುನ್ನುಗ್ಗಲು ಪ್ರಯತ್ನಿಸಿದರು.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಆರ್. ಅಶೋಕ್, ಸಿ. ಟಿ. ರವಿ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಮತ್ತು ಹಲವಾರು ರೈತ ಮುಖಂಡರು ಭಾಗವಹಿಸಿದ್ದರು. ರೈತರ ಸಂಕಷ್ಟವನ್ನು ಪ್ರತಿಬಿಂಬಿಸುವ ಸಂಕೇತವಾಗಿ, ಹಲವು ರೈತರು ಮತ್ತು ನಾಯಕರು ಬಾರುಕೋಲು (ಕೋಲು) ಹಿಡಿದು ಸಾಗಿದ್ದು, ರೈತರನ್ನು ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರ ನೇತೃತ್ವದಲ್ಲಿ ಬೃಹತ್ ಸಂಖ್ಯೆಯಲ್ಲಿ ಸುವರ್ಣಸೌಧದತ್ತ ಮುನ್ನುಗ್ಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ತಡೆದರು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲ ಕಾಲ ಮಾತಿನ ಚಕಮಕಿ ಮತ್ತು ನೂಕುನುಗ್ಗಲು ಉಂಟಾಯಿತು. ರೈತರು ಮುತ್ತಿಗೆ ಹಾಕುವ ಪ್ರಯತ್ನವನ್ನು ಮುಂದುವರಿಸಿದಾಗ, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರು.
ಪೊಲೀಸರ ಸೂಚನೆಯನ್ನ ಧಿಕ್ಕರಿಸಿ ಮುನ್ನುಗ್ಗಲು ಯತ್ನಿಸಿದ ಬಿ. ವೈ. ವಿಜಯೇಂದ್ರ, ಸಿ. ಟಿ. ರವಿ, ಆರ್. ಅಶೋಕ್ ಸೇರಿದಂತೆ ಹಲವು ಹಿರಿಯ ಬಿಜೆಪಿ ನಾಯಕರು ಮತ್ತು ಪ್ರಮುಖ ರೈತ ಮುಖಂಡರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದುಕೊಂಡರು. ಅವರನ್ನು ಪೊಲೀಸ್ ವಾಹನಗಳಲ್ಲಿ ಕರೆದೊಯ್ಯಲಾಯಿತು.
ಸುವರ್ಣಸೌಧದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಧಿವೇಶನಕ್ಕೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಪ್ರಮುಖ ಆದ್ಯತೆಯಾಗಿದೆ.
ಬಿಜೆಪಿ ಮತ್ತು ರೈತರು ಸರ್ಕಾರದ ವಿರುದ್ಧ ನಡೆಸುತ್ತಿರುವ ಈ ಬೃಹತ್ ಪ್ರತಿಭಟನೆಗೆ ಮುಖ್ಯ ಕಾರಣಗಳನ್ನ ನೋಡುವುದಾದರೇ, ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ, ಸರ್ಕಾರವು ರೈತರಿಗೆ ಸೂಕ್ತ ಮತ್ತು ಸಕಾಲಿಕ ಪರಿಹಾರ ವಿತರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಬ್ಬು, ಮೆಕ್ಕೆಜೋಳ ಸೇರಿದಂತೆ ರೈತರ ಪ್ರಮುಖ ಬೆಳೆಗಳಿಗೆ ನ್ಯಾಯಯುತ ಬೆಲೆ ಮತ್ತು ಕನಿಷ್ಠ ಬೆಂಬಲ ಬೆಲೆ ದೊರಕುತ್ತಿಲ್ಲ. ಜೊತೆಗೆ ಕಾಂಗ್ರೆಸ್ ನಾಯಕತ್ವದಲ್ಲಿನ ಅಧಿಕಾರ ಹಂಚಿಕೆಗಾಗಿ ನಡೆಯುತ್ತಿರುವ ಆಂತರಿಕ ಕದನದಿಂದಾಗಿ ರೈತರ ಸಮಸ್ಯೆಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಹೀಗಾಗಿ ಬೇಸತ್ತ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಒಟ್ಟಾರೆಯಾಗಿ, ಬೆಳಗಾವಿ ಅಧಿವೇಶನವು ಇಂದು ಕೂಡ ರೈತರ ಆಕ್ರೋಶ ಮತ್ತು ವಿರೋಧ ಪಕ್ಷದ ರಾಜಕೀಯ ಹೋರಾಟದ ಬಿಸಿಗೆ ಸಾಕ್ಷಿಯಾಯಿತು. ಪ್ರಮುಖ ನಾಯಕರ ಬಂಧನದ ನಂತರವೂ ಹೋರಾಟ ಮುಂದುವರೆಯುವ ಸಾಧ್ಯತೆಗಳಿದ್ದು, ರಾಜ್ಯ ಸರ್ಕಾರ ಈ ಪ್ರತಿಭಟನೆಗಳನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.





