ಗಣೇಶನ ಮೇಲೆ ಚಪ್ಪಲಿ ಇಟ್ಟ ಕೇಸ್‌: ಸಿಸಿ ಕ್ಯಾಮರಾದಲ್ಲಿ ಮಹಿಳೆಯ ವಿಕೃತಿ ಬಟಾ ಬಯಲು

Untitled design 2025 09 21t134155.378

ಹಾಸನ: ಹಾಸನ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದಲ್ಲಿ ಸ್ಥಾಪಿಸಲಾಗಿದ್ದ ಗಣಪತಿ ಮೂರ್ತಿಯ ಮೇಲೆ ಚಪ್ಪಲಿಗಳನ್ನು ಇಟ್ಟ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದು, ಈ ಕೃತ್ಯವನ್ನು ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಮಾಡಿರಬಹುದೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಪೊಲೀಸರ ತನಿಖೆಯಲ್ಲಿ, ದೇವಾಲಯದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆಯ ದೃಶ್ಯ ಸೆರೆಯಾಗಿದೆ. ವಿಡಿಯೋ ದೃಶ್ಯಗಳಲ್ಲಿ, ಒಬ್ಬ ಮಹಿಳೆ ಚಪ್ಪಲಿಗಳನ್ನು ಧರಿಸಿಕೊಂಡು ದೇವಾಲಯದ ಒಳಗೆ ಪ್ರವೇಶಿಸಿ, ಗಣಪತಿ ಮೂರ್ತಿಯ ಮೇಲೆ ಚಪ್ಪಲಿಗಳನ್ನು ಇಡುವುದು ಕಂಡುಬಂದಿದೆ. ಮೂರ್ತಿಯ ಮೇಲಿದ್ದ ಚಪ್ಪಲಿಗಳು ಮತ್ತು ಮಹಿಳೆ ಧರಿಸಿದ್ದ ಚಪ್ಪಲಿಗಳ ನಡುವೆ ಹೊಂದಾಣಿಕೆ ಕಂಡುಬಂದಿದ್ದು, ಆಕೆಯೇ ಈ ಕೃತ್ಯವನ್ನು ಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.  ಆಕೆಯ ಮಾನಸಿಕ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಈ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪುರಸಭೆ ಆವರಣದಲ್ಲಿ ಸೇರಿ ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಘೋಷಣೆ ಕೂಗಿದ್ದಾರೆ. ಬಿಜೆಪಿ ನಾಯಕ ಸಿ.ಟಿ. ರವಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಪ್ರತಿಭಟನೆಯ ತೀವ್ರತೆ ಇನ್ನಷ್ಟು ಹೆಚ್ಚಾಗಿದೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

Exit mobile version