ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಕುಡಿಬೇಡ ಎಂದು ಬುದ್ಧಿವಾದ ಹೇಳಿದ್ದ ಅಜ್ಜಿಯನ್ನೇ ಮೊಮ್ಮಗ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಈ ದುರ್ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಕಂಚಗಯ್ಯನದೊಡ್ಡಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೃತರನ್ನು 65 ವರ್ಷದ ಗೌರಮ್ಮ ಎಂದು ಗುರುತಿಸಲಾಗಿದ್ದು, ಹತ್ಯೆ ಆರೋಪದ ಮೇಲೆ ಅವರ ಮೊಮ್ಮಗ ಪ್ರಜ್ವಲ್ನನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಜ್ವಲ್ ಕಾಲೇಜು ಶಿಕ್ಷಣವನ್ನು ಅರ್ಧದಲ್ಲೇ ತೊರೆದು ಯಾವುದೇ ಉದ್ಯೋಗವಿಲ್ಲದೆ ಅಲೆದಾಡುತ್ತಿದ್ದನು. ಜೊತೆಗೆ ಗಾಂಜಾ ಮತ್ತು ಮದ್ಯದ ವ್ಯಸನಕ್ಕೂ ಒಳಗಾಗಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.
ಕುಟುಂಬದವರ ಪ್ರಕಾರ, ಪ್ರಜ್ವಲ್ಗೆ ಗೌರಮ್ಮ “ಕೆಲಸ ಮಾಡಿಕೊಂಡು ಜವಾಬ್ದಾರಿಯಿಂದ ಬದುಕು, ಸಮಯ ಮತ್ತು ಹಣ ವ್ಯರ್ಥ ಮಾಡಬೇಡ” ಎಂದು ಅವರು ಆಗಾಗ ಬುದ್ಧಿವಾದ ಹೇಳುತ್ತಿದ್ದರು. ಇದೇ ವಿಷಯವಾಗಿ ಮನೆಯಲ್ಲೇ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು.
ಮಂಗಳವಾರ ರಾತ್ರಿ ಕೂಡ ಇದೇ ವಿಚಾರವಾಗಿ ಅಜ್ಜಿ ಮತ್ತು ಮೊಮ್ಮಗನ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಬಳಿಕ ರಾತ್ರಿ ತಡವಾಗಿ ನಶೆಯಲ್ಲಿದ್ದ ಪ್ರಜ್ವಲ್ ಕೋಪದ ಭರದಲ್ಲಿ ಅಡುಗೆ ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಮಲಗಿದ್ದ ಅಜ್ಜಿ ಗೌರಮ್ಮ ಅವರ ಮೇಲೆ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ ಸುಮಾರು 2 ಗಂಟೆ ವೇಳೆಗೆ ನಡೆದ ಈ ಕೃತ್ಯದಲ್ಲಿ ಗೌರಮ್ಮ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆಯ ನಂತರ ಪ್ರಜ್ವಲ್ ತನ್ನ ಮನೆಗೆ ತೆರಳಿ, ತಾಯಿಯ ಬಳಿ ತಾನು ಅಜ್ಜಿಯನ್ನು ಕೊಂದಿರುವುದಾಗಿ ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ ಮನೆಯ ಬಾಗಿಲು ತೆರೆದು ನೋಡಿದಾಗ ಗೌರಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಬನ್ನೇರುಘಟ್ಟ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದರು.
ಪೊಲೀಸರ ವಿಶೇಷ ತಂಡವು ತ್ವರಿತ ಕಾರ್ಯಾಚರಣೆ ನಡೆಸಿ ಪರಾರಿಯಾಗಿದ್ದ ಆರೋಪಿ ಪ್ರಜ್ವಲ್ನನ್ನು ಬಂಧಿಸಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.





