ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು:ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಕಟ್ಟಡದ ಮೇಲೆ ಹತ್ತಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕೈಯಲ್ಲಿ ಗಾಜಿನ ಚೂರು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಯುವಕನನ್ನು ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸಮಯೋಚಿತವಾಗಿ ಮನವೊಲಿಸಿ ಕೆಳಗೆ ಇಳಿಸಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕೋಣನಕುಂಟೆ ಪೊಲೀಸರು ತಕ್ಷಣವೇ ಅಗ್ನಿಶಾಮಕ ದಳದ ಸಹಾಯ ಕೋರಿದರು.

ಶೇಖ್ ಇಬ್ರಾಹಿಂ (26) ಎಂಬ ಯುವಕ ಶಾಲಾ ಕಟ್ಟಡದ ಮೇಲ್ಛಾವಣಿಗೆ ತೆರಳಿ, ಕೈಯಲ್ಲಿ ಒಡೆದ ಗಾಜಿನ ತುಂಡನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾನೆ. ಅಧಿಕಾರಿಗಳು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸಿ, ಯಾವುದೇ ಆತುರದ ಕ್ರಮ ಕೈಗೊಳ್ಳದೆ ಯುವಕನೊಂದಿಗೆ ಮಾತುಕತೆ ನಡೆಸಿದರು.

ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೃಷ್ಣ ತಿಮ್ಮೇಗೌಡ ನೇತೃತ್ವದ ತಂಡ ಹಲವು ನಿಮಿಷಗಳ ಕಾಲ ಯುವಕನೊಂದಿಗೆ ಸಮಾಲೋಚನೆ ನಡೆಸಿತು. ಇದೇ ವೇಳೆ ಅಗ್ನಿಶಾಮಕ ಸಿಬ್ಬಂದಿಯೂ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ನಿರಂತರ ಮನವೊಲಿಕೆ ಮತ್ತು ಸಮಾಧಾನಕರ ಮಾತುಕತೆಯ ಬಳಿಕ ಯುವಕ ಸ್ವಯಂಪ್ರೇರಿತವಾಗಿ ಕೆಳಗೆ ಇಳಿಯಲು ಒಪ್ಪಿಕೊಂಡನು.

ನಂತರ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಪ್ರಾಥಮಿಕ ವಿಚಾರಣೆಯಲ್ಲಿ ಕೌಟುಂಬಿಕ ಸಮಸ್ಯೆಗಳ ಕಾರಣದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾರಣ ಈ ರೀತಿವರ್ತಿಸಿದ್ದಾಗಿ ಆತ ತಿಳಿಸಿದ್ದಾನೆ.

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

ಬೆಂಗಳೂರು: ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮರಿಯಪ್ಪನಪಾಳ್ಯದಲ್ಲಿ ವಾಸವಾಗಿರುವ 13 ವರ್ಷದ ಸಮರ್ಥ್ ಎಂಬ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯಾದ ಸೇಂಟ್ ಫಿಲೋಮಿನ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಅವಮಾನಕಾರಿ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಿಕ್ಷಕರ ವರ್ತನೆಯಿಂದ ಬಾಲಕ ಮಾನಸಿಕವಾಗಿ ತೀವ್ರ ಒತ್ತಡಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಶಾಲೆಯಲ್ಲಿ ಪದೇಪದೇ ಕಿರುಕುಳ ನೀಡಲಾಗುತ್ತಿತ್ತು ಎಂಬುದು ಪೋಷಕರ ಆರೋಪವಾಗಿದೆ. ವಿದ್ಯಾರ್ಥಿಯ ಜಾತಿಯ ಬಗ್ಗೆಯೂ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನೆಯ ದಿನ ಶಾಲೆಯಿಂದ ಮನೆಗೆ ಬಂದ ಬಳಿಕ ಸಮರ್ಥ್ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ನಂತರ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಆತನ ಅಣ್ಣ ಗಮನಿಸಿದ್ದು, ತಕ್ಷಣ ಅಕ್ಕಪಕ್ಕದವರ ಸಹಾಯದಿಂದ ಬಾಲಕನನ್ನು ರಕ್ಷಿಸಿದ್ದಾರೆ. ಬಳಿಕ ತುರ್ತು ಚಿಕಿತ್ಸೆಗಾಗಿ ಆತನನ್ನು ನಾಯಂಡಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಬಾಲಕನ ಪೋಷಕರು ಹಾಗೂ ಸಂಬಂಧಿಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮರ್ಥ್‌ನ ತಂದೆ ಮಹೇಶ್ ಕುಮಾರ್ ಕಿರಾಣಿ ಅಂಗಡಿ ನಡೆಸುತ್ತಿದ್ದು, ತಾಯಿ ಕುಸುಮ ಕೂಡ ಅದೇ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

“ಶಾಲೆಯಲ್ಲಿ ಮಗನಿಗೆ ಯಾವ ರೀತಿಯ ಒತ್ತಡ ನೀಡಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಮರ್ಥ್‌ನ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

 
Exit mobile version