ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು

Untitled design 2026 08 29T115521.566

ನೆಲಮಂಗಲ: ವೀಕೆಂಡ್ ಹಿನ್ನೆಲೆ ಬೆಂಗಳೂರು ನಗರದಿಂದ ತಮ್ಮ ಊರುಗಳತ್ತ ತೆರಳುತ್ತಿದ್ದ ವಾಹನ ಸವಾರರಿಗೆ ಭಾರೀ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಬೆಂಗಳೂರು-ನೆಲಮಂಗಲ ನಡುವಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ.

ಶನಿವಾರ ವೀಕೆಂಡ್ ಹಿನ್ನೆಲೆ ಬೆಳಗ್ಗೆಯಿಂದಲೇ ಬೆಂಗಳೂರು ನಗರದಿಂದ ಹೊರ ಜಿಲ್ಲೆಗಳತ್ತ ತೆರಳುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರ ಪರಿಣಾಮ ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ-48 (NH-48) ಹಾಗೂ ರಾಷ್ಟ್ರೀಯ ಹೆದ್ದಾರಿ-75 (NH-75)ರಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ, ಕೆಲವು ಕಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ.

ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು

ಬೆಂಗಳೂರು-ನೆಲಮಂಗಲ ಮಾರ್ಗವು ರಾಜ್ಯದ ಪ್ರಮುಖ ಸಂಪರ್ಕ ರಸ್ತೆಗಳಲ್ಲೊಂದಾಗಿದೆ. ಬೆಂಗಳೂರು ನಗರವನ್ನು ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಸಂಪರ್ಕಿಸುವ ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅದರಲ್ಲೂ ವಾರಾಂತ್ಯದ ದಿನಗಳಲ್ಲಿ ನಗರದಿಂದ ಹೊರ ಜಿಲ್ಲೆಗಳು ಹಾಗೂ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗುವುದರಿಂದ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತದೆ.

ಶನಿವಾರವೂ ಇದೇ ಪರಿಸ್ಥಿತಿ ಮುಂದುವರಿದಿದ್ದು, ಹೆದ್ದಾರಿಯಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಕೆಲವೆಡೆ ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿದ್ದರೆ, ಮತ್ತಷ್ಟು ಕಡೆಗಳಲ್ಲಿ ಸಣ್ಣ ಪ್ರಮಾಣದ ಜಾಮ್ ಕೂಡ ಕಂಡುಬಂದಿದೆ. ಇದರಿಂದ ಊರಿಗೆ ಹೊರಟಿದ್ದವರು ಹಾಗೂ ದೂರದ ಜಿಲ್ಲೆಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ವಾಹನ ದಟ್ಟಣೆ ಹೆಚ್ಚಾದ ಹಿನ್ನೆಲೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರ ನಿಯಂತ್ರಿಸಲು ಹರಸಾಹಸ ನಡೆಸುತ್ತಿದ್ದಾರೆ. ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರು ಪ್ರಮುಖ ಜಂಕ್ಷನ್‌ಗಳು ಹಾಗೂ ಹೆಚ್ಚು ದಟ್ಟಣೆ ಇರುವ ಪ್ರದೇಶಗಳಲ್ಲಿ ನಿಯೋಜನೆಗೊಂಡಿದ್ದಾರೆ.

ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಂಚಾರ ನಿರ್ವಹಣೆ ಪೊಲೀಸರಿಗೆ ಸವಾಲಾಗಿದೆ. ಒಂದೆಡೆ ವೀಕೆಂಡ್ ವಾಹನ ದಟ್ಟಣೆ, ಮತ್ತೊಂದೆಡೆ ಹೆದ್ದಾರಿಯಲ್ಲಿನ ಸಂಚಾರ ಸಮಸ್ಯೆಗಳಿಂದಾಗಿ ವಾಹನ ಸವಾರರು ನಿಧಾನವಾಗಿ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

22 ಜಿಲ್ಲೆಗಳಿಗೆ ಪ್ರಮುಖ ಸಂಪರ್ಕ

ಬೆಂಗಳೂರು-ನೆಲಮಂಗಲ ಮಾರ್ಗವು ಕೇವಲ ಬೆಂಗಳೂರು ಮತ್ತು ನೆಲಮಂಗಲ ನಡುವಿನ ಸಂಪರ್ಕಕ್ಕೆ ಸೀಮಿತವಾಗಿಲ್ಲ. ರಾಜ್ಯದ ಸುಮಾರು 22 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಮಾರ್ಗ ಇದಾಗಿದೆ. ಹೀಗಾಗಿ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾದರೆ ಅದರ ಪರಿಣಾಮ ದೂರದ ಜಿಲ್ಲೆಗಳಿಗೆ ತೆರಳುವ ವಾಹನಗಳ ಮೇಲೂ ಬೀಳುತ್ತದೆ.

ಹೆದ್ದಾರಿ ಸಮಸ್ಯೆಗಳ ಕುರಿತು ಜಿಲ್ಲಾಡಳಿತದಿಂದ ಹಲವು ಬಾರಿ ಮನವಿ ಮಾಡಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ. 

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ 

Exit mobile version