ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಈ ಘಟನೆಯು ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕ್ವಾರಿಯಲ್ಲಿ ನಡೆದ ಭೀಕರ ಘಟನೆ
ಮಾದಪಟ್ಟಣದ ಕಾವೇರಿ ಕ್ರಷರ್ ಎಂಬ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆಯೊಂದು ಕುಸಿದು ಬಿದ್ದಿದೆ. ಬೆಳಗ್ಗೆ 7.30 ರ ಸುಮಾರಿಗೆ ಕ್ವಾರಿಯಲ್ಲಿ ಬ್ಲಾಸ್ಟಿಂಗ್ (ಸ್ಫೋಟ) ಕಾರ್ಯ ನಡೆಯುತ್ತಿತ್ತು. ಆ ಸಮಯದಲ್ಲೇ ಬಂಡೆಗಳು ಕುಸಿದಿದ್ದು ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದಾರೆ. ಪರಿಣಾಮ ಅವಶೇಷಗಳಡಿ ಸಿಲುಕಿದ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತಾವರೆಕೆರೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಹಂತ
ಘಟನೆ ಸಂಭವಿಸಿದ ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಬಂಡೆಗಳ ರಾಶಿಯಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆ ಇದ್ದು, ಪರಿಶೀಲಿಸಲು ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ಬಂಡೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಮೃತರ ಕುಟುಂಬಗಳಿಗೆ ಅಗತ್ಯ ಸಹಾಯ ಮತ್ತು ಪರಿಹಾರ ಒದಗಿಸುವ ಕುರಿತು ಸೂಚನೆ ನೀಡಿದ್ದಾರೆ.
ಕ್ವಾರಿ ಯಾರದು? ಕಾರ್ಮಿಕರು ಯಾರು?
ಆನಂದಸ್ವಾಮಿ ಎಂಬುವವರಿಗೆ ಸೇರಿದ ಕಾವೇರಿ ಕ್ರಷರ್ನಲ್ಲಿ ಈ ಘಟನೆ ಸಂಭವಿಸಿದೆ. ಮೃತ ಕಾರ್ಮಿಕರು ನೆರೆಯ ರಾಜ್ಯಗಳಿಂದ ಬಂದವರಾಗಿದ್ದು, ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸುಮಾರು 15-20 ಮಂದಿ ಕಾರ್ಮಿಕರು ಆ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 7 ಮಂದಿ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ತಾವರೆಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.





