ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ಕಡಲ ತೀರದ ಸಮೀಪದ ವೆಂಕಟಾಪುರ ನದಿಯಲ್ಲಿ ಸಂಭವಿಸಿದ ಭೀಕರ ದುರಂತ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಪ್ಪೆಚಿಪ್ಪು (ಮರಕಲ) ಸಂಗ್ರಹಿಸಲು ತೆರಳಿದ್ದ ಒಂದೇ ಗ್ರಾಮದ ಜನರ ತಂಡ ನೀರಿನ ಸೆಳೆತಕ್ಕೆ ಸಿಲುಕಿ 10 ಮಂದಿ ಸಾವನ್ನಪ್ಪಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಸುದ್ದಿ ತಿಳಿದು ತೀವ್ರ ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ನೋವಿನ ಹಾಗೂ ದುರದೃಷ್ಟಕರ ಘಟನೆ” ಎಂದು ತಿಳಿಸಿದ್ದಾರೆ.
ಅದರ ಜೊತೆಗೆ, “ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಇನ್ನೂ ಕೆಲವರು ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕಾಣೆಯಾದವರು ಸುರಕ್ಷಿತವಾಗಿ ಬದುಕಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
ಏನಿದು ದುರಂತ?
ಭಟ್ಕಳ ತಾಲೂಕಿನ ವೆಂಕಟಾಪುರ ನದಿಯಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ. ಶಿರಾಲಿ ಸಮೀಪದ ಸಾರದಹೊಳೆ ಗ್ರಾಮದ 14 ಜನರ ತಂಡ ಒಟ್ಟಾಗಿ ಕಪ್ಪೆಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿತ್ತು. ಈ ವೇಳೆ ನದಿಯ ಆಳವಾದ ಭಾಗದಲ್ಲಿ ನೀರಿನ ಪ್ರಬಲ ಸೆಳೆತಕ್ಕೆ ಸಿಲುಕಿದ ತಂಡದ ಸದಸ್ಯರು ಒಬ್ಬರ ಹಿಂದೆ ಒಬ್ಬರು ಮುಳುಗತೊಡಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ ಮೀನುಗಾರರು ಹಾಗೂ ಗ್ರಾಮಸ್ಥರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ಮೂವರನ್ನು ಜೀವಂತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಈಗಾಗಲೇ 10 ಮಂದಿಯ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿರುವುದು ದೃಢಪಟ್ಟಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ…
— Siddaramaiah (@siddaramaiah) May 24, 2026
ಮೂವರು ಇನ್ನೂ ನಾಪತ್ತೆ
ಘಟನೆಯಲ್ಲಿ ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ನದಿಯಲ್ಲಿ ನಿರಂತರ ಶೋಧ ನಡೆಸುತ್ತಿದ್ದಾರೆ. ನದಿಯ ನೀರಿನ ರಭಸ ಹೆಚ್ಚಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
