ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

ಟೌನ್ ಶಿಪ್

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ನೈಸ್ ರಸ್ತೆ ಟೋಲ್‌ ವಿರೋಧಿಸಿ ಜೆಡಿಎಸ್ ಇಂದು (ಆ.18) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿತು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕರೆ ನೀಡಿದ್ದ ಪಾದಯಾತ್ರೆ ಎರಡನೇ ದಿನವೇ ಮೊಟಕುಗೊಂಡ ಹಿನ್ನೆಲೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ರೈತರ ಜಮೀನು, ನೈಸ್ ಯೋಜನೆ ಹಾಗೂ ಟೋಲ್ ವಿಚಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಯಿತು.

ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್

ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್ ಮತ್ತು ನೈಸ್ ವಿಚಾರದಲ್ಲಿ ಸರ್ಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ನ ಹಾಲಿ ಮತ್ತು ಮಾಜಿ ಶಾಸಕರು ಚರ್ಚೆಗೆ ಬಂದರೆ ತಾವು ಏಕಾಂಗಿಯಾಗಿ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದರು.

ಕನಕಪುರದಲ್ಲಿ ಜಮೀನು ಮಾರಾಟ ಮಾಡಬೇಡಿ ಎಂದು ಹೇಳಿದ್ದ ನಾಯಕರು ಇದೀಗ ಬಿಡದಿ ಭಾಗದ ರೈತರ ಕೃಷಿ ಜಮೀನು ಪಡೆಯಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು. “ನಾನು ಚರ್ಚೆಗೆ ಸಿದ್ಧ, ಬನ್ನಿ ಮಾತಾಡೋಣ. ಹೆದರಿ ಓಡಿ ಹೋಗುವುದಿಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

ನೈಸ್ ಯೋಜನೆ ಕುರಿತೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯೋಜನೆಯ ಭೂಮಿ ಮತ್ತು ರೈತರಿಗೆ ನೀಡಬೇಕಾದ ಪರಿಹಾರದ ವಿಚಾರದಲ್ಲಿ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದರು. ನೈಸ್‌ಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ನಿಖಿಲ್ ವಾಗ್ದಾಳಿ

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಜಮೀನು ಕಸಿದು ರಿಯಲ್ ಎಸ್ಟೇಟ್ ಚಟುವಟಿಕೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯ ಶಾಸಕರು ಸಚಿವರಾಗಿದ್ದರೂ ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ ನಿಖಿಲ್, ಬಿಡದಿ ಟೌನ್‌ಶಿಪ್ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆಗೆ ಸಮಯ ನೀಡುವಂತೆ ಮನವಿ ಮಾಡಿದರು.

 

ದೇವೇಗೌಡರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ನೈಸ್ ಯೋಜನೆ ವಿಚಾರದಲ್ಲಿ ಮಾತನಾಡಿದ ಎಚ್‌.ಡಿ. ದೇವೇಗೌಡರು, ಕಳೆದ 25–26 ವರ್ಷಗಳಿಂದ ಈ ವಿಚಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಹೇಳಿದರು. ನೈಸ್ ಟೋಲ್ ಮತ್ತು ಒಪ್ಪಂದದ ವಿಚಾರದಲ್ಲಿ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದ ಅವರು, ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನೈಸ್ ಯೋಜನೆಯನ್ನು ದೇವೇಗೌಡರು ರೂಪಿಸಿದ್ದು, ಬಿಡದಿ ಟೌನ್‌ಶಿಪ್ ಯೋಜನೆ ಕುಮಾರಸ್ವಾಮಿ ಅವಧಿಯಲ್ಲಿ ಮುಂದುವರಿದಿದ್ದು, ಈಗ ಅದನ್ನು ತಾವು ಮುಂದುವರಿಸುತ್ತಿರುವುದಾಗಿ ವಿಧಾನಸಭೆಯಲ್ಲಿ ಹೇಳಿದ್ದಾರೆ. ಯೋಜನೆಯಲ್ಲಿ ಲೋಪದೋಷಗಳಿದ್ದರೆ ಅವುಗಳನ್ನು ಸರಿಪಡಿಸಬಹುದು ಎಂದಿದ್ದಾರೆ.

ಈ ನಡುವೆ ಜೆಡಿಎಸ್ ವಿಧಾನಸೌಧ ಮುತ್ತಿಗೆ ನಿರ್ಧಾರವನ್ನು ಕೈಬಿಟ್ಟಿದೆ. ಕಾನೂನಿಗೆ ಗೌರವ ನೀಡುವ ಕಾರಣದಿಂದ ಮುತ್ತಿಗೆ ಕೈಬಿಟ್ಟರೂ, ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆಗಳ ವಿರುದ್ಧ ರೈತರ ಪರ ಹೋರಾಟ ಮುಂದುವರಿಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Exit mobile version