ಬೀದರ್‌ನಲ್ಲಿ ನಿಗೂಢ ವಸ್ತು ಸ್ಫೋಟ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

Untitled design 2026 01 31T172056.946

ಬೀದರ್: ಬೀದರ್‌ನ ಹುಮ್ನಾಬಾದ್ ತಾಲೂಕಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟವೊಂದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ತಾಲೂಕಿನ ಮೊಳಕೇರಾ ಗ್ರಾಮದ ಹೊರವಲಯದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಮೊಳಕೇರಾ ಗ್ರಾಮದ ಬಳಿ ಶಾಲಾ ಮಕ್ಕಳು ಹಾಗೂ ಇತರೆ ಜನರು ಓಡಾಡುತ್ತಿದ್ದ ಸಂದರ್ಭದಲ್ಲಿ ಹಾದಿ ಪಕ್ಕದಲ್ಲಿದ್ದ ಒಂದು ಅಪರಿಚಿತ ವಸ್ತು ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದಲ್ಲಿದ್ದ ಆರು ಮಂದಿಗೆ ತೀವ್ರ  ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದು,ಘಟನೆ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ (SP) ಮಾತನಾಡಿದ ಸಚಿವ ,ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಸ್ಫೋಟಕ್ಕೆ ಕಾರಣವೇನು ? ಸ್ಫೋಟಗೊಂಡ ವಸ್ತು ಯಾವುದು ? ಅದು ಅಲ್ಲಿಗೆ ಹೇಗೆ ಬಂತು?  ಎಂಬ ಬಗ್ಗೆ ವಿಧಿವಿಜ್ಞಾನ ತಜ್ಞರ (FSL) ನೆರವಿನೊಂದಿಗೆ ಮಾದರಿಗಳನ್ನು ಸಂಗ್ರಹಿಸಿ ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿರುವ ಸಚಿವರು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ. ಹಳ್ಳಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಜನರು ಭಯಪಡಬೇಡಿ ಎಂದು ಮನವಿ ಮಾಡಿದ್ದಾರೆ.

ಬೀದರ್‌ನಲ್ಲಿ ಮತ್ತೆ ನಿಗೂಢ ಸ್ಫೋಟ: ಶಾಲೆಗೆ ಹೋಗುತ್ತಿದ್ದ 6 ಮಕ್ಕಳಿಗೆ ಗಂಭೀರ ಗಾಯ

ಬೀದರ್: ಬೀದರ್‌ ಜಿಲ್ಲೆಯ ಹುಮ್ನಾಬಾದ್‌‌‌‌ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಮತ್ತೆ ನಿಗೂಢ ಸ್ಫೋಟ ಸಂಭವಿಸಿದ್ದು, ಈ ಘಟನೆ ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಶಾಲೆಗೆ ತೆರಳುತ್ತಿದ್ದ ಆರು ಮಂದಿ ಬಾಲಕರು ಹಾಗೂ ಅವರೊಂದಿಗೆ ನಡೆದು ಹೋಗುತ್ತಿದ್ದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಪ್ರತಿದಿನ ಬೆಳಿಗ್ಗೆ ಮಕ್ಕಳು ಹಾಗೂ ಗ್ರಾಮಸ್ಥರು ಸಂಚರಿಸುವ ಪ್ರದೇಶದಲ್ಲೇ ಈ ಘಟನೆ ನಡೆದಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೊರಟಿದ್ದ ಮಕ್ಕಳು ರಸ್ತೆ ಬದಿಯಲ್ಲಿದ್ದ ವಸ್ತುವಿನ ಬಳಿ ಬಂದಾಗ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕೆಲವರಿಗೆ ಕಾಲು, ಕೈ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹುಮ್ನಾಬಾದ್‌‌‌‌ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಂಪೂರ್ಣ ಪ್ರದೇಶವನ್ನು ಸೀಲ್ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ, ಸ್ಫೋಟದ ಮೂಲ ಮತ್ತು ಸ್ವರೂಪ ಪತ್ತೆಹಚ್ಚಲು ಸೋಕೋ (Scene of Crime Officer) ತಂಡವನ್ನು ಕರೆಸಲಾಗಿದೆ. ಸ್ಫೋಟಗೊಂಡ ವಸ್ತುಗಳ ಅವಶೇಷಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ಮಧ್ಯೆ, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ನೀಡಿ ಸ್ವತಃ ಪರಿಶೀಲನೆ ನಡೆಸುತ್ತಿದ್ದಾರೆ.

ಮೊಳಕೇರಾ ಗ್ರಾಮದಲ್ಲಿ ಈ ರೀತಿಯ ನಿಗೂಢ ಸ್ಫೋಟಗಳು ಇದೇ ಮೊದಲಲ್ಲ. ಕಳೆದ ಆರು ತಿಂಗಳ ಅವಧಿಯಲ್ಲಿ ಇದು ಐದನೇ ಅಥವಾ ಆರನೇ ಸ್ಫೋಟವಾಗಿದ್ದು, ಪ್ರತಿ ಬಾರಿ ವಿಭಿನ್ನ ಪ್ರದೇಶಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಈ ಹಿಂದಿನ ಸ್ಫೋಟಗಳಲ್ಲೂ ಸ್ಪಷ್ಟ ಕಾರಣ ಪತ್ತೆಯಾಗದೆ ಇರುವುದೇ ಗ್ರಾಮಸ್ಥರಲ್ಲಿ ಭಯ ಹೆಚ್ಚಾಗಲು ಕಾರಣವಾಗಿದೆ.

Exit mobile version