ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ (ಕೆಡಿಪಿ) ಸಭೆ ರಣರಂಗವಾಗಿ ಬಿಟ್ಟಿದೆ. ಅಭಿವೃದ್ಧಿ ವಿಚಾರಗಳ ಚರ್ಚೆಗಾಗಿ ಕರೆಯಲಾಗಿದ್ದ ಸಭೆ, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಡುವೆ ಗಲಾಟೆ ನಡೆದಿದೆ.
ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆ ಆರಂಭವಾಗುತ್ತಿದ್ದಂತೆಯೇ ವಾತಾವರಣ ತೀವ್ರಗೊಂಡಿತು. ಹುಮ್ನಾಬಾದ್ ಶಾಸಕ ಸಿದ್ದು ಪಾಟೀಲ್ ಅವರು ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ವಿರುದ್ಧ ಭೂ ಕಬಳಿಕೆ ಆರೋಪ ಹೊರಿಸಿದರು. ಲೇಔಟ್ ಸಂಬಂಧಿತ ವಿಚಾರ ಪ್ರಸ್ತಾಪವಾಗುತ್ತಿದ್ದಂತೆಯೇ ಮಾತಿನ ಚಕಮಕಿ ಶುರುವಾಗಿದ್ದು, ಪರಸ್ಪರ ಏಕವಚನದಲ್ಲಿ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಾಸಕ ಸಿದ್ದು ಪಾಟೀಲ್ ಅವರು ಭೀಮರಾವ್ ಪಾಟೀಲ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದೀಯೆಂದು ಆಕ್ರೋಶ ವ್ಯಕ್ತಪಡಿಸಿದರೆ, ಅದಕ್ಕೆ ತಿರುಗೇಟು ನೀಡಿದ ಭೀಮರಾವ್ ಪಾಟೀಲ್ ಕೂಡ ಕಿಡಿಕಾರಿದ್ದಾರೆ. ಮಾತಿನ ಜಗಳ ಕ್ಷಣಾರ್ಧದಲ್ಲಿ ತಾರಕ್ಕೇರಿದ್ದು, ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಸಭೆ ನಡೆಯುತ್ತಿದ್ದ ಸಚಿವ ಈಶ್ವರ ಖಂಡ್ರೆ ಅವರ ಎದುರಲ್ಲೇ ಶಾಸಕರು ಮತ್ತು ಎಂಎಲ್ಸಿಗಳು ಕೈ ಎತ್ತಿದ ದೃಶ್ಯ ಕಂಡುಬಂದಿದೆ.
ಗಲಾಟೆ ತೀವ್ರಗೊಳ್ಳುತ್ತಿದ್ದಂತೆಯೇ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ಮಧ್ಯಪ್ರವೇಶಿಸಲು ಯತ್ನಿಸಿದರು. ನಂತರ ಬೆಂಬಲಿಗರ ನಡುವೆಯೂ ವಾಗ್ವಾದ ಜೋರಾಯಿತು. ಸಭಾಂಗಣದಲ್ಲಿ ಗದ್ದಲ, ಕೂಗು ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿ ಕೈಮೀರಿತ್ತು.
ಈ ಸಂದರ್ಭದಲ್ಲಿ ಸಭೆಗೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಕ್ಷಣ ಮಧ್ಯಪ್ರವೇಶಿಸಿ ಇಬ್ಬರೂ ಕುಳಿತುಕೊಳ್ಳುವಂತೆ ಸೂಚಿಸಿದರು. ಶಾಂತಿ ಕಾಪಾಡುವಂತೆ ಮನವಿ ಮಾಡಿದರೂ, ಗಲಾಟೆ ನಿಯಂತ್ರಣಕ್ಕೆ ಬರಲಿಲ್ಲ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಶಾಸಕರು ಹಾಗೂ ಎಂಎಲ್ಸಿಗಳನ್ನು ತಡೆಯಲು ಮುಂದಾದರು.
ಸಭೆಯ ಗೌರವ ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ಸಚಿವ ಈಶ್ವರ ಖಂಡ್ರೆ ಅವರು ಕೆಡಿಪಿ ಸಭೆಯನ್ನು ಮುಂದೂಡುವ ನಿರ್ಧಾರ ಕೈಗೊಂಡರು. ಗಲಾಟೆಯಲ್ಲಿ ತೊಡಗಿದ್ದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್ಸಿ ಭೀಮರಾವ್ ಪಾಟೀಲ್ ಇಬ್ಬರೂ ಸಭೆಯನ್ನು ಅರ್ಧದಲ್ಲೇ ತೊರೆದು ಹೊರನಡೆದರು.
ಈ ಮಹತ್ವದ ಸಭೆಯಲ್ಲಿ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಓ ಗಿರೀಶ್ ಬೋಧಲೆ, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.





