ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಮತ್ತು ಸ್ಪೀಕರ್ ಜೊತೆ ಮಾತನಾಡಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸುದ್ದಿಗಾರರಿಗೆ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಬಳಿಕ ಅವರು ಮಾತನಾಡಿದರು.
ಕಳೆದ ಶಾಸನಸಭೆ ಅಧಿವೇಶನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಸಂಬಂಧಿಸಿದ ಹನಿಟ್ರ್ಯಾಪ್ ಆರೋಪ ಹಾಗೂ ಮುಸ್ಲಿಂ ಸಮುದಾಯಕ್ಕೆ ಸಾರ್ವಜನಿಕ ಕಾಂಟ್ರಾಕ್ಟ್ಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡುವ ಕಾಯ್ದೆಯ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್, 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆರ್.ಅಶೋಕ ಟೀಕಿಸಿದರು. ಕಾಂಗ್ರೆಸ್ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದ ಇತಿಹಾಸ ನಮಗೆ ಗೊತ್ತಿದೆ. ಜನರು ನಮಗೆ ಅಧಿವೇಶನದಲ್ಲಿ ಮಾತನಾಡಲು ಮತ ನೀಡಿದ್ದಾರೆ. ಈ ಅಮಾನತು ಶಾಸಕರ ದೈನಂದಿನ ಕೆಲಸಕ್ಕೂ ಅಡ್ಡಿಯಾಗಿದೆ ಎಂದರು.
ಈ ಹಿಂದೆ ಕಾಂಗ್ರೆಸ್ ಶಾಸಕರು ಸ್ಪೀಕರ್ ಪೀಠಕ್ಕೆ ನುಗ್ಗಿದ್ದರು. ಆಗ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಆಶಯಕ್ಕೆ ತಕ್ಕಂತೆ ವರ್ತಿಸಿತ್ತು. ಆಡಳಿತ ಪಕ್ಷದಷ್ಟೇ ವಿರೋಧ ಪಕ್ಷವೂ ಮುಖ್ಯ. ಕಾನೂನು ಸಚಿವ ಎಚ್.ಕೆ.ಪಾಟೀಲ್ ಮತ್ತು ಸ್ಪೀಕರ್ ಜೊತೆ ಈ ಬಗ್ಗೆ ಚರ್ಚಿಸಿದ್ದೇವೆ. ಅಮಾನತು ಆದೇಶವನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದೇವೆ. ರಾಜ್ಯಪಾಲರು ಸ್ಪೀಕರ್ಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ಆಶೋಕ ತಿಳಿಸಿದರು.
ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಮತ್ತು ಶಾಸಕರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ತಪ್ಪಾಗಿ ಮಾತನಾಡುತ್ತಿದ್ದಾರೆ ಎಂದು ಆರ್.ಅಶೋಕ ಆರೋಪಿಸಿದರು. ಹಿಂದೂ ಧರ್ಮದ ಬಗ್ಗೆ ಕೇಳಿಯೇ ಉಗ್ರರು ದಾಳಿ ನಡೆಸಿದ್ದಾರೆ. ಸಚಿವ ಆರ್.ಬಿ.ತಿಮ್ಮಾಪುರ್ ಪ್ರಕಾರ, ಉಗ್ರರು ಅವಸರದಲ್ಲಿದ್ದು ಕೂಡಲೇ ಹತ್ಯೆ ಮಾಡಿದ್ದಾರೆ. ಹತ್ಯೆಯಾದವರ ಕುಟುಂಬವೇ ಘಟನೆಯನ್ನು ವಿವರಿಸಿದೆ. ಇಷ್ಟಾದರೂ ಧರ್ಮದ ಆಧಾರದಲ್ಲಿ ದಾಳಿಯಾಗಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ಗೆ ಓಟು ಮುಖ್ಯವೇ ಹೊರತು ರಾಷ್ಟ್ರವಲ್ಲ ಎಂದು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಾಕಿಸ್ತಾನಕ್ಕೆ ಕಳುಹಿಸಿದರೆ, ಅವರನ್ನು ರಥದಲ್ಲಿ ಮೆರವಣಿಗೆ ಮಾಡಿ ಸ್ವಾಗತಿಸುತ್ತಾರೆ. ಅವರಿಗೆ ಪಾಕಿಸ್ತಾನದ ಉನ್ನತ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಯುದ್ಧದ ತೀರ್ಮಾನವನ್ನು ಸೇನೆ ಮತ್ತು ಹಿರಿಯ ನಾಯಕರು ತೆಗೆದುಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಕಿಡಿಕಾರಿದರು.
ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ತಾಳಿ, ಜನಿವಾರ ತೆಗೆಯುವಂತೆ ಸೂಚನೆ ಇದೆ ಎಂಬ ಮಾಹಿತಿಯ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಚರ್ಚಿಸಲಾಗಿದೆ. ಇಂತಹ ನಿಯಮಗಳನ್ನು ಜಾರಿಗೆ ತರುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರ್.ಅಶೋಕ ತಿಳಿಸಿದರು.





