ಜನಾಕ್ರೋಶ ಯಾತ್ರೆ ಶುರು: ಸರ್ಕಾರದ ವಿರುದ್ಧ ಕೇಸರಿ ಕಹಳೆ!

Film 2025 04 07t091354.025

ರಾಜ್ಯ ಸರ್ಕಾರದ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ, ಬಿಜೆಪಿ ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಬಸ್, ಮೆಟ್ರೋ, ಡೀಸೆಲ್-ಪೆಟ್ರೋಲ್, ಹಾಲು, ವಿದ್ಯುತ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಬೆಂಡಾಗಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಕೇಸರಿ ಪಡೆ ಹೋರಾಟಕ್ಕೆ ಮುಂದಾಗಿದೆ. ಮುಸ್ಲಿಂ ಗುತ್ತಿಗೆದಾರರ ಮೀಸಲಾತಿ, ದಲಿತರ ಹಣ ಲೂಟಿ, ರೈತರ ಕಡೆಗಣನೆಯನ್ನು ಪ್ರಮುಖ ಆಧಾರವಾಗಿಟ್ಟುಕೊಂಡು ಈ ಯಾತ್ರೆ ರೂಪಿಸಲಾಗಿದೆ.

ಜನಾಕ್ರೋಶ ಯಾತ್ರೆಯ ಆರಂಭ

ಇಂದು ಬೆಳಗ್ಗೆ 10 ಗಂಟೆಗೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ ದೊರೆಯಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಯಾತ್ರೆಗೆ ಶುಭಾರಂಭ ನೀಡಲಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ 1-2 ಕಿಲೋಮೀಟರ್ ಪಾದಯಾತ್ರೆ ನಡೆಸಿ, ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ. ಸುಮಾರು 15 ದಿನಗಳ ಕಾಲ ನಡೆಯುವ ಈ ಯಾತ್ರೆಯಲ್ಲಿ ಪ್ರತಿದಿನ ಎರಡು ಜಿಲ್ಲೆಗಳಲ್ಲಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

ಯಾತ್ರೆಯ ಉದ್ದೇಶ

ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸೆಳೆದ ಸರ್ಕಾರ, ಇನ್ನೊಂದೆಡೆ ಬೆಲೆ ಏರಿಕೆಯಿಂದ ಜನರಿಗೆ ತೊಂದರೆ ಉಂಟುಮಾಡಿದೆ ಎಂಬ ಆರೋಪವಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ಈ ಜನಾಕ್ರೋಶ ಯಾತ್ರೆ ಆರಂಭಿಸಿದೆ. ನಿನ್ನೆ ವಿಪಕ್ಷ ನಾಯಕ ಆರ್. ಅಶೋಕ್ ಯಾತ್ರೆಯ ಲೋಗೋ ಬಿಡುಗಡೆ ಮಾಡಿದ್ದರು. ಈ ಹೋರಾಟವು ನಾಲ್ಕು ಹಂತಗಳಲ್ಲಿ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಒಂದು ಜಿಲ್ಲೆಯಲ್ಲಿ ಮತ್ತು ಮಧ್ಯಾಹ್ನ 3 ಗಂಟೆಗೆ ಮತ್ತೊಂದು ಜಿಲ್ಲೆಯಲ್ಲಿ ಯಾತ್ರೆ ಸಾಗಲಿದೆ.

ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಗುರಿಯೊಂದಿಗೆ ಆರಂಭವಾಗಿರುವ ಈ ಯಾತ್ರೆ, ಕೇವಲ ರಾಜಕೀಯ ಪ್ರದರ್ಶನಕ್ಕೆ ಸೀಮಿತವಾಗದೇ ಜನರ ನೈಜ ಆಕ್ರೋಶವನ್ನು ಸರ್ಕಾರಕ್ಕೆ ತಲುಪಿಸುತ್ತದೆಯೇ ಎಂಬುದು ಕುತೂಹಲಕಾರಿಯಾಗಿದೆ. ಈ ಯಾತ್ರೆಯ ಒತ್ತಡದಿಂದ ಸರ್ಕಾರ ಬೆಲೆ ಏರಿಕೆ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡುತ್ತದೆಯೇ ಎಂಬುದನ್ನು ನೋಡಬೇಕಾಗಿದೆ.

Exit mobile version