ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ಬೆಂಗಳೂರು:  ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಇಂದು ಬೆಳಗ್ಗೆ ಬಿಎಂಟಿಸಿಯ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ವಾಯುವಜ್ರ ಬಸ್‌ಗೆ ಹಿಂಬದಿಯಿಂದ ಬರುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಎಲೆಕ್ಟ್ರಿಕ್ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿದಂತೆ ಕೆಲ ಪ್ರಯಾಣಿಕರು ಬಸ್‌ನೊಳಗೆ ಸಿಲುಕಿಕೊಂಡಿದ್ದರು.

ಅಪಘಾತದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್‌ನ ಮುಂಭಾಗ ಅಪ್ಪಚ್ಚಿಯಾಗಿದ್ದರಿಂದ ಒಳಗೆ ಸಿಲುಕಿದ್ದವರನ್ನು ಹೊರತೆಗೆದಲು ಕ್ರೇನ್ ಸಹಾಯ ಪಡೆಯಬೇಕಾಯಿತು. ವಿಶೇಷವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಕಾಲು ಬಸ್‌ನಲ್ಲಿ ಸಿಲುಕಿಕೊಂಡಿದ್ದು, ಸಿಬ್ಬಂದಿ ಬಹಳ ಎಚ್ಚರಿಕೆಯಿಂದ ಆಕೆಯನ್ನು ರಕ್ಷಿಸಿದರು.

ಗಾಯಗೊಂಡವರಲ್ಲಿ ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮುಂಭಾಗದ ಆಸನಗಳಲ್ಲಿ ಕುಳಿತಿದ್ದ ನಾಲ್ವರು ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬ ಮಹಿಳೆಗೆ ತಲೆಗೆ ಪೆಟ್ಟಾಗಿದ್ದು, ಕಾಲಿಗೆ ಗಂಭೀರ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲರನ್ನೂ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ಪ್ರತಿಕ್ರಿಯಿಸಿ, ಮುಂದೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಲ್ಲಿಸಿದ್ದರಿಂದ ಹಿಂಬದಿಯ ಬಸ್ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಮುಂದಿನ ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಹೇಳಿದರು.

ಅಪಘಾತದ ಪರಿಣಾಮ ಕೆ.ಆರ್. ಸರ್ಕಲ್ ಪ್ರದೇಶದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಬಳಿಕ ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ಬಸ್‌ಗಳನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸಾಮಾನ್ಯ ಸ್ಥಿತಿಗೆ ತರಲಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪಶ್ಚಿಮ ವಲಯ ಸಂಚಾರ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನಂತಹ ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳ ಸುರಕ್ಷತೆ ಹಾಗೂ ಚಾಲಕರ ಎಚ್ಚರಿಕೆಯಿಂದ ಸಂಚಾರದ ಅಗತ್ಯತೆ ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

Exit mobile version