ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಬಲಿಷ್ಠ (9)

ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ಸಾಕಾಗುವಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿ ಮತ್ತು ಕುಡಿಯುವ ನೀರಿನ ಭದ್ರತೆಯನ್ನು ಕಾಪಾಡುವುದು ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ಈ ವಿಚಾರದಲ್ಲಿ ಸರ್ಕಾರ ದೃಢ ನಿಲುವು ತಾಳಬೇಕು ಎಂದು ಆಗ್ರಹಿಸಿದರು.

ದೆಹಲಿಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಕಾವೇರಿ ನೀರಿನ ಹಂಚಿಕೆ ಸಂಬಂಧ ಕರ್ನಾಟಕದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗಳಲ್ಲಿ ರಾಜ್ಯದ ಪ್ರತಿನಿಧಿತ್ವ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸಮರ್ಥವಾಗಿ ಪ್ರಾಧಿಕಾರಗಳ ಮುಂದೆ ಮಂಡಿಸುವಲ್ಲಿ ವಿಫಲವಾಗಿರುವುದರಿಂದಲೇ ತಮಿಳುನಾಡು ನಿರಂತರವಾಗಿ ನೀರಿಗಾಗಿ ಒತ್ತಡ ಹೇರುತ್ತಿದೆ ಎಂದರು.

ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ ಇರುವ ನೀರು ಕುಡಿಯುವ ಅಗತ್ಯಗಳನ್ನು ಪೂರೈಸಲು ಮಾತ್ರ ಸಾಕಾಗುತ್ತದೆ. ಕೃಷಿ ಸೇರಿದಂತೆ ಇತರ ಉದ್ದೇಶಗಳಿಗೆ ನೀರನ್ನು ಬಳಸುವ ಪರಿಸ್ಥಿತಿ ಇಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು. ರಾಜ್ಯದ ನೀರಿನ ಸಂಗ್ರಹ, ಮಳೆ ಕೊರತೆ ಹಾಗೂ ಭವಿಷ್ಯದ ಕುಡಿಯುವ ನೀರಿನ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದರು.

ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಈಗಾಗಲೇ ಕಾವೇರಿ ನೀರಿನ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಆತಂಕವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ ಹಿತಾಸಕ್ತಿಯನ್ನು ರಕ್ಷಿಸುವುದು ಯಾವುದೇ ಸರ್ಕಾರದ ಜವಾಬ್ದಾರಿಯಾಗಿದ್ದು, ಈ ವಿಚಾರದಲ್ಲಿ ರಾಜಕೀಯಕ್ಕಿಂತ ಜನರ ಹಿತವೇ ಮುಖ್ಯವಾಗಬೇಕು ಎಂದು ಅವರು ಹೇಳಿದರು.

ತಮ್ಮ ಮುಖ್ಯಮಂತ್ರಿ ಅವಧಿಯನ್ನು ಉಲ್ಲೇಖಿಸಿದ ಬಸವರಾಜ ಬೊಮ್ಮಾಯಿ, ತಮ್ಮ ಸರ್ಕಾರದ ಅವಧಿಯಲ್ಲಿಯೂ ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದ ಆದೇಶಗಳು ಬಂದಿದ್ದರೂ, ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದೃಢ ನಿಲುವು ತೆಗೆದುಕೊಂಡಿದ್ದೆವು ಎಂದು ಹೇಳಿದರು. ಇದೇ ರೀತಿಯ ಧೈರ್ಯ ಮತ್ತು ಬದ್ಧತೆಯನ್ನು ಈಗಿನ ಸರ್ಕಾರವೂ ತೋರಿಸಬೇಕು. ರಾಜ್ಯದ ರೈತರು ಹಾಗೂ ಜನರ ಕುಡಿಯುವ ನೀರಿನ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯವಿದ್ದರೆ ಕಾನೂನು ಹೋರಾಟವನ್ನೂ ಮುಂದುವರಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾವೇರಿ ವಿವಾದವು ಹಲವು ದಶಕಗಳಿಂದ ಮುಂದುವರಿದಿರುವ ಸೂಕ್ಷ್ಮ ವಿಷಯವಾಗಿದ್ದು, ರಾಜ್ಯದ ಹಕ್ಕುಗಳನ್ನು ಸಮರ್ಥವಾಗಿ ಪ್ರತಿಪಾದಿಸುವ ಜೊತೆಗೆ ನೀರಿನ ಲಭ್ಯತೆ, ಮಳೆ ಪ್ರಮಾಣ ಹಾಗೂ ಜನರ ಅವಶ್ಯಕತೆಗಳನ್ನು ಆಧರಿಸಿ ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

Exit mobile version