ಬೆಂಗಳೂರು: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕವು ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಬ್ರಾಹ್ಮಣ ಸಮಾಜದ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ನೇಮಕ ಮಾಡಿದೆ.
ಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀ ಹರೀಶ್ ಶರ್ಮಾ ಅವರನ್ನು ನೇಮಕ ಮಾಡಲಾಗಿದ್ದು, ಅವರ ನೇತೃತ್ವದಲ್ಲಿ ಸಂಘಟನೆಯ ವಿವಿಧ ವಿಭಾಗಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ಮಹಿಳಾ ಘಟಕದ ಅಧ್ಯಕ್ಷೆ, ಉಪಾಧ್ಯಕ್ಷೆಯರು, ಪ್ರಧಾನ ಕಾರ್ಯದರ್ಶಿಯರು, ಕಾರ್ಯದರ್ಶಿಯರು ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಜವಾಬ್ದಾರಿಗಳನ್ನು ಸಹ ನೂತನವಾಗಿ ಹಂಚಿಕೆ ಮಾಡಲಾಗಿದೆ.
ನೂತನ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷರಾದ ಜಿ. ಆರ್. ಪ್ರದೀಪ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿಶ್ವನಾಥ ಜೋಶಿ, ಉದ್ಯಮ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀಧರ್ ಹಾಗೂ ಬೆಂಗಳೂರು ಉತ್ತರ ಮಹಿಳಾ ಘಟಕದ ಅಧ್ಯಕ್ಷೆಯಾದ ಆಶಾ ಕುಮಾರಿ ಎ. ಜಿ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಜಿ.ಆರ್. ಪ್ರದೀಪ್ ಅವರು, ಸಮಾಜದ ಅಭಿವೃದ್ಧಿಗೆ ಸಂಘಟನೆಯು ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಹೊಸ ತಂಡವು ಯುವಜನರನ್ನು ಹಾಗೂ ಸಮಾಜದ ವಿವಿಧ ವರ್ಗಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಮಾಜ ಸೇವೆ, ಶಿಕ್ಷಣ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ ಅವರು ಮಾತನಾಡಿ, ಸಂಘದ ಧ್ಯೇಯ ಮತ್ತು ಉದ್ದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನೂತನ ಪದಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಸಮಾಜದ ಎಲ್ಲಾ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿ, ಸಂಘಟನೆಯ ಸದಸ್ಯತ್ವವನ್ನು ಹೆಚ್ಚಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ನೂತನವಾಗಿ ಜವಾಬ್ದಾರಿ ವಹಿಸಿಕೊಂಡ ಪದಾಧಿಕಾರಿಗಳು ಸಂಘದ ಬೆಳವಣಿಗೆಗಾಗಿ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರು ಹಾಗೂ ಗಣ್ಯರು ನೂತನ ತಂಡಕ್ಕೆ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘವು ಹೊಸ ತಂಡದ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳು ಇನ್ನಷ್ಟು ವ್ಯಾಪಕವಾಗಿ ನಡೆಯಲಿದ್ದು, ಸಂಘಟನೆಯು ರಾಜ್ಯದಾದ್ಯಂತ ತನ್ನ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದೆ.





