ಶಾಸಕ ಬೈರತಿ ಬಸವರಾಜ್ ಜಯದೇವ ಆಸ್ಪತ್ರೆಗೆ ದಾಖಲು

Untitled design 2026 02 13T215546.430

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿ ಹೆಸರು ಕೇಳಿಬಂದಿರುವ ಶಾಸಕ ಬೈರತಿ ಬಸವರಾಜ್ ಅವರನ್ನು ಆರೋಗ್ಯ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಸಿಜಿ ಪರೀಕ್ಷೆಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ತಪಾಸಣೆ ಅಗತ್ಯವಿದೆ ಎಂದು ಸೂಚಿಸಿದ್ದು, ಅದರ ಆಧಾರದಲ್ಲಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ನಡೆದ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯ ವೇಳೆ ಹೃದಯ ಸಂಬಂಧಿತ ಸಮಸ್ಯೆಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ನ್ಯಾಯಾಲಯವು ಅವರನ್ನು ವಿಶೇಷ ತಪಾಸಣೆಗಾಗಿ ಜಯದೇವ ಆಸ್ಪತ್ರೆಗೆ ಕಳುಹಿಸುವಂತೆ ಸೂಚನೆ ನೀಡಿತ್ತು. ಕೋರ್ಟ್ ಆದೇಶದಂತೆ ಸಿಐಡಿ ವಶದಲ್ಲಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಶಾಸಕ ಬೈರತಿ ಬಸವರಾಜ್ ಅವರ ಆರೋಗ್ಯ ತಪಾಸಣೆ ನಡೆಸುತ್ತಿದೆ. ಈಗಾಗಲೇ ರಕ್ತ ಪರೀಕ್ಷೆಗಾಗಿ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿವಿಧ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಇಂದು ಇಡೀ ರಾತ್ರಿ ಅವರು ಆಸ್ಪತ್ರೆಯಲ್ಲೇ ಉಳಿಯಲಿದ್ದು, ವೈದ್ಯಕೀಯ ಮೇಲ್ವಿಚಾರಣೆ ಮುಂದುವರಿಯಲಿದೆ.

ಇದೇ ವೇಳೆ, ನ್ಯಾಯಾಲಯವು ಮೆಡಿಕಲ್ ಟೆಸ್ಟ್ ರಿಪೋರ್ಟ್ ಅನ್ನು ನಾಳೆ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸುವಂತೆ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಗೌತಮ್ ಅವರಿಗೆ ಸೂಚಿಸಿದೆ. ವೈದ್ಯಕೀಯ ವರದಿ ಆಧಾರದಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಜೈಲಿಗೆ ಕಳುಹಿಸಬೇಕೇ ಅಥವಾ ಸಿಐಡಿ ಕಸ್ಟಡಿಗೆ ಒಪ್ಪಿಸಬೇಕೇ ಎಂಬುದರ ಕುರಿತು ನ್ಯಾಯಾಧೀಶರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಸದ್ಯಕ್ಕೆ ಶಾಸಕ ಬೈರತಿ ಬಸವರಾಜ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆದರೆ ಆಂಜಿಯೋಗ್ರಾಂ ವರದಿ ಹೊರಬರುವವರೆಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಲು ವೈದ್ಯರು ನಿರಾಕರಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಕಟ್ಟು ನಿಟ್ಟಾಗಿರುತ್ತದೆ.

Exit mobile version