ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಡಿವೈರ್ಗೆ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಚೆನ್ನೈ ಮೂಲದ ಗೋಪಿ (38 ವರ್ಷ), ಗೌತಮ್ ರಮೇಶ್ (28 ವರ್ಷ), ಹರಿಹರನ್ (27 ವರ್ಷ) ಮತ್ತು ಜಯಂತ್ (30 ವರ್ಷ) ಎಂಬ ನಾಲ್ವರು ಚೆನ್ನೈ ನಿವಾಸಿಗಳು ಸಾವನ್ನಪ್ಪಿದ್ದಾರೆ.
ಅಪಘಾತದ ಸಂಭಾವ್ಯ ಕಾರಣ
ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವಂತೆ, ಯುವಕರು ಚೆನ್ನೈಗೆ ಹಿಂದಿರುಗುತ್ತಿದ್ದ ಸಮಯದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ಹೊಡೆತವು ತೀವ್ರವಾಗಿದ್ದು, ವಾಹನದಲ್ಲಿದ್ದ ನಾಲ್ವರಿಗೂ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನವು ಸಂಪೂರ್ಣವಾಗಿ ಜಖಂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಸುದ್ದಿ ತಿಳಿದ ಕೂಡಲೇ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಘಟನಾ ಸ್ಥಳದ ಫೋರೆನ್ಸಿಕ್ ಪರಿಶೀಲನೆ ಮಾಡಿದ್ದಾರೆ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅನಂತರ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾ*ವು
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣ ಪ್ರದೇಶದಲ್ಲಿ ಘಟಿಸಿದ ಮಾರಕ ರೈಲು ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಪ್ರಾಣ ಕಳೆದುಕೊಂಡಿದ್ದಾರೆ. ವಂದೇ ಭಾರತ್ ಹೈ-ಸ್ಪೀಡ್ ರೈಲಿಗೆ ಸಿಲುಕಿದ್ದು ಕೇರಳದ ಸ್ಟೆರ್ಲಿನ್ ಎಲಿಜ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಘಟನೆಯಲ್ಲಿ ಪ್ರಾಣಬಿಟ್ಟಿದ್ದಾರೆ. ಘಟನೆಯ ನೇರ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ಆರಂಭಿಕ ತನಿಖೆಯಲ್ಲಿ ಇದು ಆತ್ಮಹತ್ಯೆಯ ಪ್ರಕರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಮೃತರಾದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ಪಠ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದರು.
ರೈಲ್ವೆ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಘಟನೆ ಸೋಮವಾರ ಮಧ್ಯಾಹ್ನ ಚಿಕ್ಕಬಾಣಾವರ ರೈಲು ನಿಲ್ದಾಣದ ಸಮೀಪದ ರೈಲು ಮಾರ್ಗದಲ್ಲಿ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ರೈಲು ಮಾರ್ಗದುದ್ದಕ್ಕೂ ನಡೆದುಕೊಂಡುಬಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅದೇ ಸಮಯದಲ್ಲಿಅತೀ ವೇಗದಲ್ಲಿ ಚಲಿಸುತ್ತಿದ್ದ ವಂದೇ ಭಾರತ್ ರೈಲು ಅವರೆಡೆಗೆ ಬರುತ್ತಿದ್ದಂತೆ ಕಂಡುಬಂದಿದೆ. ರೈಲಿನ ಚಾಲಕರು ಸಿಗ್ನಲ್ ನೀಡಿದ ನಂತರವೂ ಅವರು ಟ್ರ್ಯಾಕ್ನಿಂದ ದೂರ ಸರಿಯದೇ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಘಟನೆಯು ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತೆ ಕಂಡುಬಂದರೂ, ಪೊಲೀಸರು ಎಲ್ಲಾ ದಿಕ್ಕಿನಿಂದ ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಅವರು ಪ್ಲಾಟ್ಫಾರ್ಮ್ನಿಂದ ಇಳಿದು ಟ್ರ್ಯಾಕ್ ಮೂಲಕ ಹಾದು ಹೋಗಲು ಮುಂದಾದಾಗ ಈ ಅಪಘಾತ ಸಂಭವಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಮೃತ ದೇಹಗಳನ್ನು ಎಂ.ಎಸ್.ಆರ್ ಆಸ್ಪತ್ರೆಯ ದಾಖಲಿಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವಗಳನ್ನ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





