ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಏಪ್ರಿಲ್ 11, 2025ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿಯ ಮಂಡನೆಯಾಗಲಿದೆ. ಈ ಸಭೆಯಲ್ಲಿ ಜಾತಿ ಜನಗಣತಿ ವರದಿಯ ಅನುಷ್ಠಾನದ ಬಗ್ಗೆ ಐತಿಹಾಸಿಕ ನಿರ್ಧಾರವೊಂದು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಭಾವಿಸಲಾಗಿದೆ.
ಹೆಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರ ಏಪ್ರಿಲ್ 11ರಿಂದ ಮೇ 30ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಜಾತಿ ವಿವರ ಸೇರಿದಂತೆ ಒಟ್ಟು 54 ಮಾನದಂಡಗಳ ಆಧಾರದ ಮೇಲೆ ಜಿಲ್ಲಾಡಳಿತದ ಸಹಕಾರದೊಂದಿಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಈ ದತ್ತಾಂಶಗಳನ್ನು ಗಣಕೀಕರಣಗೊಳಿಸಿ, ವರದಿಯನ್ನು ಸಿದ್ಧಪಡಿಸಲಾಗಿತ್ತು. 2024ರ ಫೆಬ್ರವರಿ 29ರಂದು ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಯಿತು.
ಕಾಂತರಾಜ ಸಮೀಕ್ಷೆಯ ದತ್ತಾಂಶಗಳನ್ನು ಬಳಸಿಕೊಂಡು ಅಧ್ಯಯನ ವರದಿ ಸಿದ್ಧಪಡಿಸುವಂತೆ ಸರ್ಕಾರವು 2023ರ ಜುಲೈ 17ರಂದು ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿತ್ತು. ಅದರಂತೆ, ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಧ್ಯಯನ ವರದಿ–2024’ ಜೊತೆಗೆ ಸಮೀಕ್ಷೆಯ ಅಂಕಿ-ಅಂಶಗಳನ್ನು ಒಳಗೊಂಡ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಈ ವರದಿಯನ್ನು 2025ರ ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಚರ್ಚೆಗೆ ಇಡಲಾಗಿತ್ತು. ಆದರೆ, ಈಗ ಏಪ್ರಿಲ್ 11ರ ಸಭೆಯಲ್ಲಿ ವರದಿಯ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ರಚನೆಯನ್ನು ಪ್ರತಿಬಿಂಬಿಸುವ ಈ ವರದಿಯ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ವರದಿಯ ಜಾರಿ ಅಥವಾ ಹೆಚ್ಚಿನ ಅಧ್ಯಯನಕ್ಕಾಗಿ ಸಮಿತಿ ರಚನೆಯಾಗುವ ಬಗ್ಗೆಯೂ ಚರ್ಚೆ ನಡೆಯಬಹುದು ಎಂದು ತಿಳಿದುಬಂದಿದೆ.





