ನವದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಸಂತಸದ ಸುದ್ದಿ ಸಿಕ್ಕಿದೆ. ತಮಿಳುನಾಡಿಗೆ ತಕ್ಷಣವೇ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಯಾವುದೇ ನಿರ್ದೇಶನ ನೀಡದ ಪ್ರಾಧಿಕಾರ, ಸದ್ಯದ ಪರಿಸ್ಥಿತಿಯನ್ನು ‘ಯಥಾಸ್ಥಿತಿ’ (Status Quo) ಯಲ್ಲಿ ಮುಂದುವರಿಸುವಂತೆ ಎರಡೂ ರಾಜ್ಯಗಳಿಗೆ ಸೂಚಿಸಿದೆ.
ಜುಲೈ 22ರಂದು ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳು ತಮ್ಮ ತಮ್ಮ ವಾದಗಳನ್ನು ಮಂಡಿಸಿದರು. ತಮಿಳುನಾಡು ತನ್ನ ಪಾಲಿನ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರೆ, ಕರ್ನಾಟಕ ರಾಜ್ಯ ಸರ್ಕಾರ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ, ಜಲಾಶಯಗಳಲ್ಲಿನ ನೀರಿನ ಮಟ್ಟ ಹಾಗೂ ರಾಜ್ಯದ ಕುಡಿಯುವ ನೀರಿನ ಅಗತ್ಯಗಳನ್ನು ವಿವರವಾದ ಅಂಕಿ-ಅಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಮಂಡಿಸಿತು.
ಸಭೆಯಲ್ಲಿ ಕರ್ನಾಟಕ ಸರ್ಕಾರ, ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ ಎಂದು ತಿಳಿಸಿತು. ಜುಲೈ ತಿಂಗಳಲ್ಲಿ ಕೆಲವೆಡೆ ಮಳೆಯಾಗಿದ್ದರೂ, ಜಲಾಶಯಗಳು ಸಮರ್ಪಕ ಮಟ್ಟಕ್ಕೆ ತುಂಬುವ ಸಾಧ್ಯತೆ ಕಡಿಮೆ ಇದೆ ಎಂದು ಸರ್ಕಾರ ವಿವರಿಸಿತು. ಅಲ್ಲದೆ, ರಾಜ್ಯದ ಅನೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ, ರಾಜ್ಯದ ರೈತರಿಗೆ ಸಹ ನೀರಾವರಿಗಾಗಿ ನೀರು ಬಿಡುಗಡೆ ಮಾಡಲಾಗುತ್ತಿಲ್ಲ ಎಂಬ ಅಂಶವನ್ನು ಹೇಳಿತು.
ಈ ವಾದವನ್ನು ಪರಿಗಣಿಸಿದ ಪ್ರಾಧಿಕಾರ, ಲಭ್ಯವಿರುವ ನೀರನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸುವಂತೆ ಸೂಚಿಸಿದೆ. ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ನೀರಿನ ಅಗತ್ಯಕ್ಕಾಗಿ ಮಾತ್ರ ಮೀಸಲಿಡಬೇಕು ಹಾಗೂ ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ನೀರು ಬಳಸಬಾರದು ಎಂದು ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ ಸುಮಾರು 2.5 ಟಿಎಂಸಿ ಹಾಗೂ ಜುಲೈ ತಿಂಗಳಲ್ಲಿ 0.54 ಟಿಎಂಸಿ ನೀರು ಈಗಾಗಲೇ ತಮಿಳುನಾಡು ತಲುಪಿದೆ. ಈ ಹಿನ್ನೆಲೆ ಸದ್ಯಕ್ಕೆ ಹೆಚ್ಚುವರಿ ನೀರು ಬಿಡುಗಡೆ ಮಾಡುವ ಅಗತ್ಯವಿಲ್ಲ ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ.
ಕರ್ನಾಟಕ ಸರ್ಕಾರದ ಪರವಾಗಿ ಮಂಡಿಸಲಾದ ಪ್ರಮುಖ ವಾದವೆಂದರೆ, ಮುಂದಿನ ಮಳೆಗಾಲದವರೆಗೆ ರಾಜ್ಯದ ಜನರಿಗೆ ಕುಡಿಯುವ ನೀರಿನ ಭದ್ರತೆ ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಲಭ್ಯವಿರುವ ನೀರನ್ನು ಅತ್ಯಂತ ಮಿತವಾಗಿ ಬಳಸಬೇಕಾದ ಪರಿಸ್ಥಿತಿ ಇದೆ. ಇದೇ ಕಾರಣದಿಂದ ಕೃಷಿಗೂ ನೀರು ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನೀತಿ ಅನುಸರಿಸುತ್ತಿದೆ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು.
ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ತಕ್ಷಣದ ನೀರು ಬಿಡುಗಡೆ ಕುರಿತಂತೆ ಯಾವುದೇ ಹೊಸ ಆದೇಶ ಹೊರಡಿಸದೆ, ಪ್ರಸ್ತುತ ಇರುವ ಪರಿಸ್ಥಿತಿಯನ್ನೇ ಮುಂದುವರಿಸಲು ಸೂಚಿಸಿದೆ. ಈ ತೀರ್ಮಾನದಿಂದ ಕರ್ನಾಟಕಕ್ಕೆ ತಾತ್ಕಾಲಿಕ ನಿರಾಳತೆ ದೊರೆತಿದ್ದು, ತಮಿಳುನಾಡಿನ ಹೆಚ್ಚುವರಿ ನೀರಿನ ಬೇಡಿಕೆಗೆ ಸದ್ಯಕ್ಕೆ ಹಿನ್ನಡೆಯಾಗಿದೆ.




