ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಅನಾರೋಗ್ಯದಿಂದ ಜುಲೈ 18ರಂದು ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಹಲವು ದಶಕಗಳ ಕಾಲ ದೇವೇಗೌಡರ ರಾಜಕೀಯ ಹಾಗೂ ವೈಯಕ್ತಿಕ ಜೀವನದಲ್ಲಿ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ ಅವರ ನಿಧನದಿಂದ ಕುಟುಂಬದ ಜೊತೆಗೆ ರಾಜಕೀಯ ವಲಯದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಸಮೀಪದ ಮೈದಾನದಲ್ಲಿ ಇರಿಸಲಾಗಿದೆ. ರಾಜಕೀಯ ನಾಯಕರು, ಗಣ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗಮಿಸಿ ಅಂತಿಮ ನಮನ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರದತ್ತ ಅಂತಿಮ ಯಾತ್ರೆ ಆರಂಭವಾಗಲಿದೆ. ಅಂತಿಮ ಯಾತ್ರೆಯು ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ, ಚನ್ನರಾಯಪಟ್ಟಣ, ಎಲೆಯೂರು, ಹಾಸನ ಡೈರಿ ಸರ್ಕಲ್, ಭೂನಳ್ಳಿ ಕ್ರಾಸ್, ಶಾಂತಿಗ್ರಾಮ, ಎನ್.ಆರ್. ಸರ್ಕಲ್ ಮಾರ್ಗವಾಗಿ ಮೊಸಳೆ ಹೊಸಳ್ಳಿಗೆ ತಲುಪಲಿದೆ. ಈ ಮಾರ್ಗದುದ್ದಕ್ಕೂ ಸಾವಿರಾರು ಜನರು ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ.
ಜುಲೈ 20ರಂದು ಬೆಳಿಗ್ಗೆ 7ರಿಂದ 9.30ರವರೆಗೆ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಬೆಳಿಗ್ಗೆ 10 ಗಂಟೆಗೆ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕೊಂಡೊಯ್ಯಲಾಗುತ್ತದೆ. ಬೆಳಿಗ್ಗೆ 11.30ಕ್ಕೆ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕುಟುಂಬ ಸದಸ್ಯರು, ಬಂಧು-ಬಳಗ ಹಾಗೂ ಗಣ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಪತ್ನಿಯ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳಲಾಗದೆ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರು ಚೆನ್ನಮ್ಮ ಅವರ ಪಾರ್ಥಿವ ಶರೀರ ಇರಿಸಲಾಗಿದ್ದ ಶೈತ್ಯಾಗಾರ ಪೆಟ್ಟಿಗೆಯ ಮೇಲೆ ತಲೆ ಇರಿಸಿ ಕಣ್ಣೀರು ಹಾಕಿದ ದೃಶ್ಯ ಎಲ್ಲರ ಮನಕಲಕಿತು. ಜೀವನ ಸಂಗಾತಿಯ ಅಗಲಿಕೆಯ ನೋವಿನಿಂದ ಭಾವುಕರಾಗಿದ್ದ ದೇವೇಗೌಡರನ್ನು ಪುತ್ರಿ ಶೈಲಜಾ ಹಾಗೂ ಕುಟುಂಬ ಸದಸ್ಯರು ಸಮಾಧಾನಪಡಿಸಿದರು.
ಇದೇ ವೇಳೆ CM ಡಿ.ಕೆ. ಶಿವಕುಮಾರ್ ಅವರು ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದ ಅವರು, “ದೇಶದ ಮಾಜಿ ಪ್ರಧಾನಿಯ ಧರ್ಮಪತ್ನಿ ಹಾಗೂ ಕೇಂದ್ರ ಸಚಿವರ ತಾಯಿಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಅತ್ಯುನ್ನತ ಗೌರವ ಸಲ್ಲಿಸಲಾಗುತ್ತದೆ” ಎಂದು ಹೇಳಿದರು.
ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಯೂ ಚೆನ್ನಮ್ಮ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಸಿದ್ದರಾಮಯ್ಯ, CM ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಗಣ್ಯರು ದೇವೇಗೌಡರ ಕುಟುಂಬಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.





