ಚಿಕ್ಕಮಗಳೂರು: ಮಲೆನಾಡಿನ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಚಿಕ್ಕಮಗಳೂರು ಮತ್ತು ಮೂಡಿಗೆರೆ ತಾಲೂಕಿನ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ನ ಹಲವು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿರುವುದು ಮುಂಬರುವ ದಿನಗಳಲ್ಲಿ ಜಿಲ್ಲೆಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಎರಡೂ ಪ್ರಮುಖ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಜೆಡಿಎಸ್ನತ್ತ ಮುಖ ಮಾಡಿರುವುದು ಚಿಕ್ಕಮಗಳೂರು ಭಾಗದಲ್ಲಿ ಜೆಡಿಎಸ್ ಸಂಘಟನೆಯನ್ನು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.
ವಿಜಯ್ ಕುಮಾರ್ ನೇತೃತ್ವದಲ್ಲಿ ಪಕ್ಷಾಂತರ
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮುಖ ಬಿಜೆಪಿ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಈ ಪಕ್ಷಾಂತರ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅವರೊಂದಿಗೆ ಬಿಜೆಪಿಯ ಹಲವು ಮುಖಂಡರು ಹಾಗೂ ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ.
ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಹಾಗೂ ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಕೂಡ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಕಾಂಗ್ರೆಸ್ನ ಕೆಲವು ಮುಖಂಡರು ಮತ್ತು ಕಾರ್ಯಕರ್ತರೂ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ.
ಇದರೊಂದಿಗೆ ಬಿಜೆಪಿ ಯುವ ಮೋರ್ಚಾದ ಮಂಡಲ ಮಟ್ಟದ ಪ್ರಮುಖ ಪದಾಧಿಕಾರಿಗಳು ಹಾಗೂ ಎರಡೂ ಪಕ್ಷಗಳ 200ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಅಧಿಕೃತ ಸೇರ್ಪಡೆ ಕಾರ್ಯಕ್ರಮ
ಬುಧವಾರ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಬೃಹತ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಸಮ್ಮುಖದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷದ ಶಾಲು ಧರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದಿಂದ ನೂರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಲಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರಮುಖ ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿರುವ ಹಿನ್ನೆಲೆ ಪಕ್ಷದ ಸ್ಥಳೀಯ ಸಂಘಟನೆಗೆ ಹೊಸ ಚೈತನ್ಯ ಸಿಗಲಿದೆ ಎಂದು ಜೆಡಿಎಸ್ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಆಗಮಿಸುತ್ತಿರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಜೆಡಿಎಸ್ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಹೊಸ ಸೇರ್ಪಡೆಗಳಿಂದ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಸಿಗಲಿದೆ ಎಂಬ ನಿರೀಕ್ಷೆ ಜೆಡಿಎಸ್ ಪಾಳಯದಲ್ಲಿದೆ.





