ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆ ಇದೀಗ ಸ್ವಲ್ಪ ಮಟ್ಟಿಗೆ ತಗ್ಗಿದರೂ, ಹವಾಮಾನ ಇಲಾಖೆ ಇನ್ನೂ ಭಾರೀ ಮಳೆಯ ಸಾಧ್ಯತೆಯನ್ನು ಸೂಚಿಸಿದೆ. ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 25ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ (ಪಿಯುಸಿ) ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಹವಾಮಾನ ಪರಿಸ್ಥಿತಿಯನ್ನು ಅವಲಂಬಿಸಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಉಡುಪಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನು ಮನಗಂಡು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಅವರು ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 25ರಂದು ರಜೆ ಘೋಷಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಇದೀಗ ಮಳೆ ಕೊಂಚ ತಗ್ಗಿದಂತೆ ಕಂಡುಬಂದರೂ, ನದಿಗಳು, ತಗ್ಗು ಪ್ರದೇಶಗಳು ಹಾಗೂ ಗುಡ್ಡಗಾಡು ಭಾಗಗಳಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು, ಅಗತ್ಯವಿದ್ದರೆ ಮಾತ್ರ ಹೊರಗಡೆ ಸಂಚರಿಸುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಪ್ರಕಟಿಸಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾಗಿರುವ ಮಳೆಯ ಪ್ರಮಾಣ ಸಾಮಾನ್ಯ ಮಟ್ಟದಲ್ಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38.3 ಮಿ.ಮೀ ಮಳೆಯಾಗಿದ್ದು, ವಾಡಿಕೆಯ ಸರಾಸರಿ 37.4 ಮಿ.ಮೀ ಆಗಿದೆ. ಉಡುಪಿ ಜಿಲ್ಲೆಯಲ್ಲಿ 48.0 ಮಿ.ಮೀ ಮಳೆಯಾಗಿದ್ದು, ವಾಡಿಕೆಯ ಸರಾಸರಿ 47.8 ಮಿ.ಮೀ ದಾಖಲಾಗಿದೆ. ಅಂಕಿ-ಅಂಶಗಳ ಪ್ರಕಾರ ಮಳೆಯ ಪ್ರಮಾಣ ವಾಡಿಕೆಯ ಮಟ್ಟದಲ್ಲಿದ್ದರೂ, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಮುಂದುವರಿಸಿದೆ.
ಕರಾವಳಿ ಭಾಗದ ನಿವಾಸಿಗಳು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವುದು, ಅನಗತ್ಯವಾಗಿ ನೀರು ತುಂಬಿದ ಪ್ರದೇಶಗಳಿಗೆ ತೆರಳದಿರುವುದು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಪರ್ಕಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಳೆಯ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
