ಬೆಂಗಳೂರಲ್ಲಿಂದು VB-G RAM G ವಿರುದ್ದ ಕಾಂಗ್ರೆಸ್ ಪ್ರೊಟೆಸ್ಟ್‌: ಕೈ ಪಡೆಗೆ ಬಿಜೆಪಿ ಕೌಂಟರ್ ಅಟ್ಯಾಕ್

Untitled design 2026 01 27T101943.613

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಪುನರಾರಂಭಗೊಳ್ಳುವ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಒಂದೆಡೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಬೀದಿಗಿಳಿದಿದ್ದರೆ, ಮತ್ತೊಂದೆಡೆ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿಯಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಹೆಸರನ್ನು ಹೊಸ VB-G RAM G ಯೋಜನೆಯೊಂದಿಗೆ ಬದಲಾಯಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಮುಖಂಡರು ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಬೃಹತ್ ಮೆರವಣಿಗೆಯೂ ಮಾಡಲಿದ್ದಾರೆ.

ಈ ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಹಿಸಲಿದ್ದಾರೆ. ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದುಹಾಕಿರುವುದು ದೇಶದ ಅಸ್ಮಿತೆಗೆ ಮಾಡಿದ ಅವಮಾನ. ತಕ್ಷಣವೇ ಗಾಂಧೀಜಿಯವರ ಹೆಸರನ್ನು ಮರುಸ್ಥಾಪಿಸಬೇಕು ಎಂಬುದು ಕಾಂಗ್ರೆಸ್‌ನ ಪ್ರಬಲ ಆಗ್ರಹವಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ.

ಕಾಂಗ್ರೆಸ್‌ನ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಕೂಡ ಕೌಂಟರ್ ತಂತ್ರ ರೂಪಿಸಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಬೃಹತ್ ಧರಣಿ ನಡೆಸಲಿದ್ದಾರೆ. ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್ ಶಾಸಕರು ತೋರಿದ ಅಶಿಸ್ತಿನ ವರ್ತನೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಅಬಕಾರಿ ಲಂಚದ ಪ್ರಕರಣಗಳು ಮತ್ತು ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಗೌರವ ನೀಡದ ಸರ್ಕಾರಕ್ಕೆ ಅಧಿಕಾರದಲ್ಲಿರುವ ಹಕ್ಕಿಲ್ಲ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಗೆ ಟ್ರಾಫಿಕ್ ಬಿಸಿ:

ರಾಜಭವನ, ವಿಧಾನಸೌಧ, ಫ್ರೀಡಂ ಪಾರ್ಕ್ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಸಾವಿರಾರು ಜನ ಜಮಾಯಿಸಲಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಸಂಚಾರ ಪೊಲೀಸರು ಈಗಾಗಲೇ ಪರ್ಯಾಯ ಮಾರ್ಗಗಳ ಸೂಚನೆ ನೀಡಿದ್ದು, ಸಾರ್ವಜನಿಕರು ನಗರದ ಕೇಂದ್ರ ಭಾಗದಲ್ಲಿ ಸಂಚರಿಸುವಾಗ ಜಾಗರೂಕತೆ ವಹಿಸುವುದು ಒಳಿತು.

Exit mobile version