ಮೋದಿ ದೇಶದ್ರೋಹಿ ಎಂದ ಕೈ ಶಾಸಕ ನಜೀರ್ ಅಹ್ಮದ್: ಬಿಜೆಪಿ ಕೆಂಡಾಮಂಡಲ

Untitled design 2026 02 02T222554.403

ಬೆಂಗಳೂರು: ರಾಜ್ಯ ವಿಧಾನಪರಿಷತ್ ಕಲಾಪದಲ್ಲಿ ಇಂದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ದೇಶದ್ರೋಹಿ’ ಎಂಬ ಪದ ಬಳಕೆ ಮಾಡಿದ್ದಾರೆ. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ವಿಧಾನ ಪರಿಷತ್‌ನ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಘಟನೆಯ ಹಿನ್ನೆಲೆ:

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸುತ್ತಿದ್ದ ವೇಳೆ, ಮಧ್ಯಪ್ರವೇಶಿಸಿದ ನಜೀರ್ ಅಹ್ಮದ್ ಅವರು ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರು. ಪ್ರಧಾನಿಯವರನ್ನು ಸುಮಾರು 10 ಬಾರಿ ನಿಂದಿಸಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದು, ಇದು ಸದನದಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತ್ತು.

ಪ್ರಧಾನಿ ವಿರುದ್ಧದ ನಿಂದನೆಯನ್ನು ಖಂಡಿಸಿದ ವಿರೋಧ ಪಕ್ಷದ ಸದಸ್ಯರು, ನಜೀರ್ ಅಹ್ಮದ್ ತಕ್ಷಣವೇ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಫೆಬ್ರವರಿ 3ರ ಬೆಳಗ್ಗೆ 11 ಗಂಟೆಗೆ ಮುಂದೂಡಿದರು. ಆದರೂ ಬಿಜೆಪಿ ಸದಸ್ಯರು ಸದನದಿಂದ ಹೊರಹೋಗದೆ ಧರಣಿ ಮುಂದುವರಿಸಿದ್ದಾರೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿಯವರನ್ನು ದೇಶದ್ರೋಹಿ ಎಂದು ಕರೆಯುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಈ ರೀತಿ ಘೋಷಣೆ ಕೂಗಿರುವುದು ನಾಚಿಕೆಗೇಡು. ನಜೀರ್ ಅಹ್ಮದ್ ಅವರನ್ನು ತಕ್ಷಣವೇ ಸದನದಿಂದ ಅಮಾನತು ಮಾಡಬೇಕು. ಇಲ್ಲದಿದ್ದರೆ ನಾಳೆ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಜೀರ್ ಅಹ್ಮದ್ ಮತ್ತು ಸಿಎಂ ಪ್ರತಿಕ್ರಿಯೆ:

ಸದನದ ಹೊರಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಜೀರ್ ಅಹ್ಮದ್, ಸದನದಲ್ಲಿ ಅಂತಹದ್ದೇನೂ ಅಸಂಬದ್ಧವಾಗಿ ಮಾತನಾಡಿಲ್ಲ. ಸದನದ ಒಳಗೆ ನಡೆದಿದ್ದನ್ನು ಹೊರಗೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿ ಜಾರಿಕೊಂಡರು. ಇನ್ನು ಈ ಗಂಭೀರ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದು ಬಿಜೆಪಿಗರು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ.

ನಜೀರ್ ಅಹ್ಮದ್ ಹೇಳಿಕೆಯನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ, ನಾಳೆ ಉಭಯ ಸದನಗಳಲ್ಲಿಯೂ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ನಜೀರ್ ಅಹ್ಮದ್ ಸದನದಿಂದ ಅಮಾನತು ಆಗಬೇಕು ಜೊತೆಗೆ ಕ್ಷಮೆ ಕೇಳಬೇಕು. ಬಿಜೆಪಿ ನಾಯಕರ ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದ್ದು, ಮಂಗಳವಾರದ ಕಲಾಪ ಮತ್ತಷ್ಟು ಕಾವೇರುವ ಸಾಧ್ಯತೆಯಿದೆ.

Exit mobile version