ಕನಕಪುರ: “ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ” ಎಂದರು.
“ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ ಸುಮಾರು 40 ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.





