ಬಿಡದಿ: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷ ತನ್ನ ಶಾಸಕರ ಮತಗಳನ್ನು ಭದ್ರಪಡಿಸಿಕೊಳ್ಳಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಬಿಡದಿಯ ವಂಡರ್ ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಡಿಸಿಎಂ ಡಾ. ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಯಿಂದ ಶಾಸಕರು ರೆಸಾರ್ಟ್ಗೆ ಆಗಮಿಸಲಿದ್ದು, 6.15ಕ್ಕೆ ಅಧಿಕೃತ ಸಭೆ ಆರಂಭವಾಗಲಿದೆ.
ಸಭೆಯ ಬಳಿಕ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ರೆಸಾರ್ಟ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಜೂನ್ 18ರಂದು ನಡೆಯಲಿರುವ ಚುನಾವಣೆಗಾಗಿ ಎಲ್ಲ ಸದಸ್ಯರು ಅಲ್ಲಿಂದಲೇ ನೇರವಾಗಿ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡಲಿದ್ದಾರೆ. ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ವಂಡರ್ ಲಾ ರೆಸಾರ್ಟ್ನಲ್ಲಿ ಸುಮಾರು 130 ಕೊಠಡಿಗಳನ್ನು ಬುಕ್ ಮಾಡಿಸಿರುವುದು ಗಮನಾರ್ಹವಾಗಿದೆ.
ಇದೇ ವೇಳೆ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ರೆಸಾರ್ಟ್ಗೆ ಆಗಮಿಸುವ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಸುಮಾರು 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 6 ಕೆಎಸ್ಆರ್ಪಿ ತುಕಡಿಗಳನ್ನು ಸಹ ನಿಯೋಜಿಸಲಾಗಿದೆ.
ಬಿಡದಿ ಟೌನ್ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಸಿಎಂ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಕೈಗೊಂಡಿರುವ ಈ ಕ್ರಮ ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯದ ಚರ್ಚೆಗೆ ಕಾರಣವಾಗಿದೆ.
