ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಮುಂದುವರಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಹತ್ವದ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಅಡ್ಡ ಮತದಾನ ಕುರಿತ ಆರೋಪಗಳು ಪಕ್ಷದ ಒಳಗೇ ಆತಂಕ ಮತ್ತು ಚರ್ಚೆಗೆ ಕಾರಣವಾಗಿವೆ. ಈ ವಿಷಯದಲ್ಲಿ ಸತ್ಯಾಸತ್ಯತೆ ಜನರ ಮುಂದೆ ಬರಬೇಕಿದೆ ಹಾಗೂ ಪಕ್ಷದ ಗೌರವವನ್ನು ಕಾಪಾಡಬೇಕಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿವೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ 63 ಶಾಸಕರ ನಡವಳಿಕೆ ಕುರಿತು ಅನುಮಾನ ಹುಟ್ಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಪಕ್ಷದೊಳಗಿನ ಗಂಭೀರ ಚರ್ಚೆಯ ವಿಷಯವಾಗಿದೆ ಎಂದು ಅವರು ತಿಳಿಸಿದರು.
ಈ ಬೆಳವಣಿಗೆಗಳು ತಮ್ಮನ್ನೂ ಗಂಭೀರವಾಗಿ ಬೇಸರಗೊಳಿಸಿರುವುದಾಗಿ ಹೇಳಿದ ವಿಜಯೇಂದ್ರ, ಬೆಳಗ್ಗೆ 3 ಗಂಟೆಗೆ ಎದ್ದು ಈ ವಿಷಯದ ಕುರಿತು ಚಿಂತನೆ ನಡೆಸಿರುವುದಾಗಿ ಹೇಳಿದರು. ಈ ಸಮಸ್ಯೆಗೆ ತಾರ್ಕಿಕ ಅಂತ್ಯ ದೊರಕಬೇಕೆಂಬ ಉದ್ದೇಶದಿಂದ ಬೆಳಗ್ಗೆ 7 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷರಿಗೆ ದೂರವಾಣಿ ಕರೆ ಮಾಡಿರುವುದಾಗಿ ಅವರು ತಿಳಿಸಿದರು. ಮುಂದಿನ ದಿನಗಳಲ್ಲಿ ತಾವು ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಕೂಡ ಹೇಳಿದರು.
ಇದೇ ಸಂದರ್ಭದಲ್ಲಿ, ಪಕ್ಷದೊಳಗೆ ಸತ್ಯ ಶೋಧನಾ ಸಮಿತಿಯನ್ನು ರಚಿಸಲಾಗಿದ್ದು, ಅದರಲ್ಲಿ ಸಿ.ಟಿ. ರವಿ ಸೇರಿದಂತೆ ಹಿರಿಯ ನಾಯಕರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಈ ಸಮಿತಿ ಅಡ್ಡ ಮತದಾನ ಆರೋಪದ ಕುರಿತು ಸಮಗ್ರ ಪರಿಶೀಲನೆ ನಡೆಸಲಿದೆ.
ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಷಯದ ಕುರಿತು ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪಕ್ಷದ ಒಳಗಿನ ಗೊಂದಲಗಳನ್ನು ನಿವಾರಿಸಿ, ಸತ್ಯವನ್ನು ಜನರ ಮುಂದೆ ಇಡುವುದು ತಮ್ಮ ಮುಖ್ಯ ಉದ್ದೇಶವಾಗಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಸಭೆಯ ಮುನ್ನ ವಿಜಯೇಂದ್ರ ಮತ್ತು ಅಶೋಕ್ ಅವರು ಸೋಮವಾರ ಸಂಜೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಮಂಗಳವಾರ ನಡೆಯಲಿರುವ ಈ ಭೇಟಿಯಲ್ಲಿ ರಾಜ್ಯದಲ್ಲಿ ನಡೆದಿರುವ ಅಡ್ಡ ಮತದಾನ ಬೆಳವಣಿಗೆಗಳು, ಅದರ ಹಿಂದಿನ ಕಾರಣಗಳು ಮತ್ತು ಶಂಕಿತ ಪಾತ್ರಗಳ ಕುರಿತು ವಿವರವಾದ ವರದಿ ಸಲ್ಲಿಸಲಿದ್ದಾರೆ.
