ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

ಬಲಿಷ್ಠ (8)

ಬೆಂಗಳೂರು, (ಜುಲೈ 29): ಕಾವೇರಿ ನೀರು ಹಂಚಿಕೆ ವಿವಾದದ ನಡುವೆಯೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನಾಳೆ ಮಹತ್ವದ ತುರ್ತು ಸಭೆ ಕರೆದಿದೆ. ಮಧ್ಯಾಹ್ನ 2.30 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸರ್ಕಾರಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಸಕ್ತ ಜಲಸ್ಥಿತಿ ಹಾಗೂ ನೀರು ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ.

ಸಭೆಯು ದೆಹಲಿಯ MTNL ಕಟ್ಟಡದಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯ ಸಮಿತಿ ಕೊಠಡಿಯಲ್ಲಿ ನಡೆಯಲಿದ್ದು, ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ಹಲ್ದಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ, ಜಲಾಶಯಗಳ ನೀರಿನ ಮಟ್ಟ ಹಾಗೂ ರಾಜ್ಯಗಳ ನೀರಿನ ಬೇಡಿಕೆ ಪ್ರಮುಖ ಚರ್ಚಾ ವಿಷಯವಾಗಲಿದೆ.

ಕರ್ನಾಟಕದ ಪರವಾಗಿ ಹಿರಿಯ ಅಧಿಕಾರಿ ಗೌರವ್ ಗುಪ್ತಾ ಸಭೆಯಲ್ಲಿ ಭಾಗವಹಿಸಲಿದ್ದು, ರಾಜ್ಯದ ಪ್ರಸ್ತುತ ಜಲಸ್ಥಿತಿಯ ಕುರಿತು ವಿವರವಾದ ಮಾಹಿತಿ ನೀಡಲಿದ್ದಾರೆ. ವಿಶೇಷವಾಗಿ ಕೆಆರ್‌ಎಸ್, ಕಬಿನಿ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವುದು, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಯನ್ನು ಉಲ್ಲೇಖಿಸಿ, ಈ ಸಂದರ್ಭದಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂಬ ನಿಲುವನ್ನು ಮಂಡಿಸಲಿದ್ದಾರೆ.

ಸಭೆಯಲ್ಲಿ ಕೇರಳದ ಪರವಾಗಿ ಪುನೀತ್ ಕುಮಾರ್, ತಮಿಳುನಾಡಿನ ಪರವಾಗಿ ಸತ್ಯಬ್ರತ, ಪುದುಚೇರಿ ಸರ್ಕಾರದ ಪರವಾಗಿ ಡಾ. ಮುತ್ತಮ್ಮ ಭಾಗವಹಿಸಲಿದ್ದಾರೆ. ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ತಮ್ಮ ತಮ್ಮ ರಾಜ್ಯಗಳ ಜಲಸ್ಥಿತಿಯನ್ನು ವಿವರಿಸಿ ಅಭಿಪ್ರಾಯ ಮಂಡಿಸುವ ಸಾಧ್ಯತೆ ಇದೆ.

ಇತ್ತೀಚೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ನಿರ್ದಿಷ್ಟ ಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ರಾಜ್ಯದ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದವು.

ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ CWMA ಸಭೆ ಮಹತ್ವ ಪಡೆದುಕೊಂಡಿದ್ದು, ಕರ್ನಾಟಕ ತನ್ನ ವಾದವನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಮಂಡಿಸುವ ನಿರೀಕ್ಷೆಯಿದೆ. ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಮಳೆ ಕೊರತೆ ಮತ್ತು ಮುಂದಿನ ತಿಂಗಳುಗಳ ಕುಡಿಯುವ ನೀರಿನ ಅಗತ್ಯವನ್ನು ಉಲ್ಲೇಖಿಸಿ, ಹೆಚ್ಚುವರಿ ನೀರು ಬಿಡುಗಡೆ ಸಾಧ್ಯವಿಲ್ಲ ಎಂಬುದನ್ನು ಪ್ರಾಧಿಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ನಡೆಯಲಿದೆ.

ನಾಳೆಯ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರ ಕಾವೇರಿ ನೀರು ಹಂಚಿಕೆ ವಿವಾದದ ಮುಂದಿನ ಬೆಳವಣಿಗೆಗಳ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಕರ್ನಾಟಕ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜನರು ಸಭೆಯ ಫಲಿತಾಂಶದತ್ತ ಕಾತರದಿಂದ ಕಾಯುತ್ತಿದ್ದಾರೆ.

Exit mobile version