ಬೆಂಗಳೂರು : ಸಿಎಂ ಕುರ್ಚಿ ಗುದ್ದಾಟದ ನಡುವೆ ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ರಾಜಕೀಯದಲ್ಲಿ ಭಾರಿ ಚರ್ಚೆಗಳು ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಸಮಯದಲ್ಲಿ, ಬಜೆಟ್ ಸಭೆಯ ನಡುವೆ ದೆಹಲಿ ಭೇಟಿ ಹಾಗೂ ರಾಹುಲ್ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಕೇಳಿದಾಗ, ಭೇಟಿ ಮಾಡುವ ಎಲ್ಲರ ಹೆಸರನ್ನು ಹೇಳಲು ಆಗುವುದಿಲ್ಲ. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್ 10 ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಭೇಟಿ ಮಾಡಿದಾಗ ನನ್ನ ಕಷ್ಟ, ದುಃಖ, ದುಮ್ಮಾನ, ಬಯಕೆ ಎಲ್ಲಾ ಹೇಳುತ್ತಾ ಇರುತ್ತೇನೆ ಎಂದು ಹೇಳಿದರು.
ನಿಮ್ಮ ಇಲಾಖೆಗೆ ಸಂಬಂಧಿದಂತೆ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದು, ನೀವು ದೆಹಲಿ ಹೋಗುತ್ತಿದ್ದೀರಿ ಎಂದು ಕೇಳಿದಾಗ, ನಾನು ಸಿಎಂ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ, ನನಗಿಂತ ಸಿಎಂ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆ ಎಂದರು.





