ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯೂರು ಕ್ಷೇತ್ರದ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಜನಸೇವೆಯಲ್ಲಿ ಅಪಾರ ಬದ್ಧತೆ ಮತ್ತು ಕಾಳಜಿ ಹೊಂದಿದ್ದ ನಾಯಕನನ್ನು ಕಳೆದುಕೊಂಡಿರುವುದು ರಾಜ್ಯ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಇಬ್ಬರೂ ನಾಯಕರು ಕಂಬನಿ ಮಿಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂತಾಪ ಸೂಚಿಸಿದ್ದು, “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ. ಆ ಸಂದರ್ಭದಲ್ಲಿ ಅವರು ಶೀಘ್ರ ಗುಣಮುಖರಾಗುವ ಭರವಸೆ ನನಗೆ ಮೂಡಿತ್ತು. ಆದರೆ ಇಂದು ಅವರ ನಿಧನದ ಸುದ್ದಿ ಆಘಾತ ಉಂಟುಮಾಡಿದೆ” ಎಂದು ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ಸಿಎಂ, “ಸುಧಾಕರ್ ಅವರು ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ್ದ ನಾಯಕರು. ಇಂತಹ ಜನಪರ ನಾಯಕ ಇನ್ನಷ್ಟು ವರ್ಷಗಳ ಕಾಲ ಜನರ ನಡುವೆ ಇರಬೇಕಾಗಿತ್ತು. ವೈದ್ಯರ ನಿರಂತರ ಪ್ರಯತ್ನ ಹಾಗೂ ನಮ್ಮೆಲ್ಲರ ಹಾರೈಕೆಯ ನಡುವೆಯೂ ಅವರು ನಮ್ಮನ್ನು ಅಗಲಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರಕಲಿ” ಎಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಭಾವುಕರಾಗಿ ಸಂತಾಪ ಸೂಚಿಸಿದ್ದಾರೆ. “ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನನ್ನ ಸಂಪುಟ ಸಹೋದ್ಯೋಗಿ ಹಾಗೂ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಕೊನೆಯುಸಿರೆಳೆದ ಸುದ್ದಿ ಮನಸ್ಸಿಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು, “ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದ ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಸದಾ ಕಾಳಜಿ ವಹಿಸುತ್ತಿದ್ದರು. ನನ್ನನ್ನು ಭೇಟಿಯಾಗಲು ಬಂದಾಗಲೆಲ್ಲಾ ಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ಮನವಿ ಮಾಡುತ್ತಿದ್ದರು. ಅವರ ಆ ಗುಣವೇ ಕ್ಷೇತ್ರದ ಜನರ ಮೇಲಿದ್ದ ಅಪಾರ ಪ್ರೀತಿ ಮತ್ತು ಬದ್ಧತೆಯನ್ನು ತೋರಿಸುತ್ತಿತ್ತು” ಎಂದು ಸ್ಮರಿಸಿದ್ದಾರೆ.
ರಾಜಕೀಯ ಜೀವನದಲ್ಲಿ ಸರಳತೆ, ಜನಸ್ನೇಹಿ ವ್ಯಕ್ತಿತ್ವ ಮತ್ತು ಅಭಿವೃದ್ಧಿ ಚಿಂತನೆಯ ಮೂಲಕ ಡಿ. ಸುಧಾಕರ್ ಅವರು ಜನಮನ ಗೆದ್ದಿದ್ದರು.





