ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ

Untitled design 2026 05 10T101352.393

ಬೆಂಗಳೂರು: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಅವರು ಇಂದು ಬೆಳಗ್ಗೆ ನಿಧನರಾದರು. ಬೆಂಗಳೂರಿನ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 3.15ಕ್ಕೆ ಅವರು ಕೊನೆಯುಸಿರೆಳೆದರು. ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶ್ವಾಸಕೋಶದ ಸೋಂಕಿನ ತೀವ್ರತೆಯಿಂದಾಗಿ ವಿಧಿವಶರಾದರು.

ಕಳೆದ ಕೆಲವು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಿ. ಸುಧಾಕರ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ನಂತರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದಿತ್ತು. ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಆರಂಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ನಂತರ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನಗಳ ಸಂಸ್ಥೆಗೆ ದಾಖಲಿಸಲಾಗಿತ್ತು. ಅಲ್ಲಿನ ತೀವ್ರ ನಿಗಾ ಘಟಕದಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಡಿ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ ಸಿದ್ದರಾಮಯ್ಯ ಸರ್ಕಾರದಲ್ಲೂ ಪ್ರಮುಖ ಸಚಿವ ಸ್ಥಾನವನ್ನು ನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನೂ ಹೊತ್ತಿದ್ದರು.

ಇದರ ಜೊತೆಗೆ, 2016ರಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್‌ (ಕಿಯೋನಿಕ್ಸ್) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಆಡಳಿತಾತ್ಮಕ ಅನುಭವ ಹಾಗೂ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅವರು ವಿಶೇಷ ಆಸಕ್ತಿ ಹೊಂದಿದ್ದರು.

Exit mobile version