ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಈದ್ಗಾ ಮೈದಾನದ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಜೇನುನೊಣಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪವಿತ್ರ ಹಬ್ಬದ ದಿನವೇ ನಡೆದ ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ರಂಜಾನ್ ಹಬ್ಬದ ಅಂಗವಾಗಿ ಶನಿವಾರ ಬೆಳಿಗ್ಗೆ ಆನಗೋಡು ಗ್ರಾಮದ ಸಮೀಪವಿರುವ ಮೈದಾನದಲ್ಲಿ ನೂರಾರು ಮುಸ್ಲಿಂ ಬಾಂಧವರು ಸೇರಿ ಸಾಮೂಹಿಕ ಪ್ರಾರ್ಥನೆ (ನಮಾಜ್) ಸಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ಮೈದಾನದ ಪಕ್ಕದ ಮರವೊಂದರಲ್ಲಿದ್ದ ದೊಡ್ಡ ಜೇನುಗೂಡಿಗೆ ಕೆಲವು ಕಿಡಿಗೇಡಿ ಯುವಕರು ಕಲ್ಲೆಸೆದಿದ್ದಾರೆ ಎನ್ನಲಾಗಿದೆ. ಇದರಿಂದ ಸಾವಿರಾರು ಜೇನುನೊಣಗಳು ಪ್ರಾರ್ಥನೆ ಸಲ್ಲಿಸುತ್ತಿದವರ ಮೇಲೆ ದಾಳಿ ಮಾಡಿವೆ.
ಜೇನುನೊಣಗಳ ದಾಳಿ ಆರಂಭವಾಗುತ್ತಿದ್ದಂತೆ ಪ್ರಾರ್ಥನೆ ಅರ್ಧಕ್ಕೆ ನಿಂತು, ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ದಾಳಿಯಲ್ಲಿ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಜೇನು ಕಡಿತಕ್ಕೆ ಒಳಗಾದವರ ಪೈಕಿ ಐವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪ್ರಸ್ತುತ ಐವರು ಸಂತ್ರಸ್ತರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರದ ಶಾಸಕರಾದ ಕೆ.ಎಸ್. ಬಸವಂತಪ್ಪ ಅವರು ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಅವರು, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು. ಅಷ್ಟೇ ಅಲ್ಲದೆ, ಚಿಕಿತ್ಸಾ ವೆಚ್ಚಕ್ಕಾಗಿ ಶಾಸಕರು ತಮ್ಮ ವೈಯಕ್ತಿಕ ಹಣದಿಂದ ಧನಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. “





