ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಇಂದು ಅವರ ಹುಟ್ಟೂರು ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಕುಟುಂಬ ಸದಸ್ಯರು, ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಅಂತ್ಯಕ್ರಿಯೆ ನಡೆಯಿತು.
ಬೆಳಗ್ಗೆಯಿಂದಲೇ ಮಾವಿನಕೆರೆ ಗ್ರಾಮದಲ್ಲಿ ಜನಸಾಗರ ನೆರೆದಿತ್ತು. ಅಂತಿಮ ದರ್ಶನಕ್ಕಾಗಿ ಆಗಮಿಸಿದ್ದ ಸಾರ್ವಜನಿಕರು ಹಾಗೂ ವಿವಿಧ ರಾಜಕೀಯ ಪಕ್ಷಗಳ ನಾಯಕರು ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ವತಿಯಿಂದ ಪೂರ್ಣ ಸರ್ಕಾರಿ ಗೌರವ ನೀಡಲಾಗಿದ್ದು, ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ರಾಷ್ಟ್ರಗೀತೆಯ ನಾದದೊಂದಿಗೆ ಗೌರವ ಸಮರ್ಪಿಸಿ, ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು.
ಬಳಿಕ ಮುಖ್ಯಮಂತ್ರಿ ದೇವೇಗೌಡರ ಕುಟುಂಬಕ್ಕೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ದೃಶ್ಯ ಎಲ್ಲರ ಗಮನ ಸೆಳೆಯಿತು.
ಸರ್ಕಾರಿ ಗೌರವದ ನಂತರ ಧಾರ್ಮಿಕ ವಿಧಿವಿಧಾನಗಳು ಆರಂಭವಾದವು. ಅರ್ಚಕರ ತಂಡದ ನೇತೃತ್ವದಲ್ಲಿ ವೇದಮಂತ್ರ ಹಾಗೂ ಸ್ತೋತ್ರ ಪಠಣ ನಡೆಯಿತು. ದೇವೇಗೌಡರು ಮತ್ತು ಕುಟುಂಬ ಸದಸ್ಯರು ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿದರು. ಸಂಪ್ರದಾಯದಂತೆ ದೇಹ ಶುದ್ಧೀಕರಣ ಕಾರ್ಯ ನೆರವೇರಿಸಿ, ಅಂತಿಮ ಸಂಸ್ಕಾರಕ್ಕೆ ಅಗತ್ಯ ವಿಧಿವಿಧಾನಗಳನ್ನು ನಡೆಸಲಾಯಿತು.
ನಂತರ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೂರು ಸುತ್ತು ಮೆರವಣಿಗೆ ನಡೆಸಲಾಯಿತು. ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿಗಳನ್ನು ನೆರವೇರಿಸಲಾಯಿತು. ಹಿರಿಯ ಪುತ್ರ ಹೆಚ್.ಡಿ. ರಮೇಶ್ ಅವರು ಅಂತ್ಯಕ್ರಿಯೆಯ ಪ್ರಮುಖ ವಿಧಿವಿಧಾನಗಳನ್ನು ನೆರವೇರಿಸಿದರು. ಗುಂಡಿಯಲ್ಲಿ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ಮಾಡಿದ ಬಳಿಕ ಪಾರ್ಥಿವ ಶರೀರವನ್ನು ಸಮಾಧಿ ಸ್ಥಳಕ್ಕೆ ಇಳಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಈ ವೇಳೆ ದೇವೇಗೌಡರು ಪತ್ನಿಯ ಪಾರ್ಥಿವ ಶರೀರಕ್ಕೆ ಮುತ್ತಿಟ್ಟು ಭಾವನಾತ್ಮಕವಾಗಿ ಅಂತಿಮ ನಮನ ಸಲ್ಲಿಸಿದರು. ಪುತ್ರ ಹೆಚ್.ಡಿ. ರೇವಣ್ಣ ಅವರು ತಾಯಿಗೆ ಮುತ್ತಿಟ್ಟು ಕಣ್ಣೀರಿನ ವಿದಾಯ ಹೇಳಿದರು. ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಸಹ ತಾಯಿಯ ಪಾರ್ಥಿವ ಶರೀರದ ಎದುರು ಭಾವುಕರಾಗಿ ಕಣ್ಣೀರು ಹಾಕಿದ ದೃಶ್ಯ ನೆರೆದಿದ್ದವರ ಮನ ಮುಟ್ಟಿತು. ಕುಟುಂಬದ ಇತರ ಸದಸ್ಯರು ಸಹ ದುಃಖವನ್ನು ತಡೆದುಕೊಳ್ಳಲಾಗದೆ ಭಾವುಕರಾದರು.
ಚೆನ್ನಮ್ಮ ಅವರ ಸೊಸೆಯರು ಅರಿಶಿಣ-ಕುಂಕುಮ ಅರ್ಪಿಸಿ, ಬಾಗಿನ ಸಮರ್ಪಿಸುವ ಮೂಲಕ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಪುತ್ರರು ಪಾರ್ಥಿವ ಶರೀರಕ್ಕೆ ಹೆಗಲು ನೀಡಿ ಅಂತಿಮಯಾತ್ರೆಯಲ್ಲಿ ಪಾಲ್ಗೊಂಡರು.
ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಸಚಿವರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು, ಸಂಸದರು ಹಾಗೂ ಕೇಂದ್ರದ ಹಲವು ಗಣ್ಯರು ಭಾಗವಹಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.




