ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು ವಾಪಸ್

Untitled design 2026 05 06T211726.585

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಾಸಲೀಲೆ ಆರೋಪದ ಹಿನ್ನೆಲೆ ಹಿಂದೆ ನೀಡಲಾಗಿದ್ದ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೇ, ಕಚೇರಿಯಲ್ಲಿಯೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆಸಿದರೆಂಬ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಈ ಹಿನ್ನೆಲೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡು ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿತ್ತು.

ಆದರೆ, ಈಗ ಸರ್ಕಾರ ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿದೆ. ಇದರ ಹಿಂದೆ ಪ್ರಮುಖ ಕಾರಣವಾಗಿ ಅವರ ಸೇವಾ ನಿವೃತ್ತಿ ಸಮೀಪಿಸುತ್ತಿರುವುದು ಹೇಳಲಾಗುತ್ತಿದೆ. ಇದೇ ತಿಂಗಳ 31ರಂದು ಅವರು ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮಾನತು ಆದೇಶವನ್ನು ಹಿಂಪಡೆಯುವ ಜೊತೆಗೆ, ರಾಮಚಂದ್ರ ರಾವ್ ಅವರಿಗೆ “ಡಿಜಿಪಿ ಪೊಲೀಸ್ ಮ್ಯಾನ್ಯುವಲ್” ಎಂಬ ಹೊಸ ಹುದ್ದೆಯನ್ನು ಸೃಷ್ಟಿಸಿ ನಿಯೋಜನೆ ಮಾಡಲಾಗಿದೆ. ಈ ಹುದ್ದೆ ತಾತ್ಕಾಲಿಕವಾಗಿದ್ದು, ನಿವೃತ್ತಿಯವರೆಗೆ ಅವರಿಗೆ ಕರ್ತವ್ಯ ನೀಡಲಾಗಿದೆ.

ಈ ನಡುವೆ, ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸಂಪೂರ್ಣ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ಏನೆಲ್ಲ ಅಂಶಗಳಿವೆ ಎಂಬುದು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ, ಆದರೂ ಅದರ ಆಧಾರದ ಮೇಲೆಯೇ ಸರ್ಕಾರ ಮುಂದಿನ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

ರಾಸಲೀಲೆ ವಿಡಿಯೋ ವೈರಲ್ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್

ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಡಿಜಿಪಿ ಕೆ. ರಾಮಚಂದ್ರ ರಾವ್ ಅವರದ್ದು ಎನ್ನಲಾದ ಈ ವಿಡಿಯೋಗಳು, ಭಾರೀ ಚರ್ಚೆಯಾಗಿದೆ. ಕಚೇರಿಯಲ್ಲೇ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಡಿಜಿಪಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ತಕ್ಷಣ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಘಟನೆಯ ಹಿನ್ನೆಲೆ: ಕಳೆದ ದಿನ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರದ್ದನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿತ್ತು. ಕಚೇರಿಯ ಆವರಣದಲ್ಲೇ ರಾಸಲೀಲೆಯಲ್ಲಿ ತೊಡಗಿದ್ದ ದೃಶ್ಯಗಳು ವಿಡಿಯೋದಲ್ಲಿದ್ದವು ಎನ್ನಲಾಗಿದೆ. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ಪೊಲೀಸ್ ಇಲಾಖೆಯ ಶಿಸ್ತಿನ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

ರಾಮಚಂದ್ರ ರಾವ್ ಅವರು ಇದೇ ವರ್ಷದ ಮೇ 31ಕ್ಕೆ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು. ಸುದೀರ್ಘ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯ ಸಂಭ್ರಮದಲ್ಲಿದ್ದ ಅಧಿಕಾರಿಗೆ ಈಗ ಈ ಹಗರಣ ನುಂಗಲಾರದ ತುತ್ತಾಗಿದೆ. ಇಲಾಖಾ ತನಿಖೆ ಬಾಕಿ ಇರುವಾಗಲೇ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ.

ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರ, ಪ್ರಾಥಮಿಕ ವರದಿಗಳ ಆಧಾರದ ಮೇಲೆ ಅವರನ್ನು ಸಸ್ಪೆಂಡ್ ಮಾಡಿದೆ. ಅಧಿಕಾರಿಯ ಈ ವರ್ತನೆಯು ಸೇವಾ ನಿಯಮಗಳ ಉಲ್ಲಂಘನೆಯಾಗಿದ್ದು, ಇಲಾಖೆಯ ಗೌರವಕ್ಕೆ ಧಕ್ಕೆ ತಂದಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಈ ಘಟನೆಯು ಪೊಲೀಸ್ ಇಲಾಖೆಯ ನೈತಿಕತೆ ಮತ್ತು ಮಹಿಳಾ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯೇ ಇಂತಹ ಅಸಭ್ಯ ಕೃತ್ಯಗಳಲ್ಲಿ ತೊಡಗಿರುವುದು ಇಲಾಖೆಯ ವಿಶ್ವಾಸಾರ್ಹತೆಯ ಮೇಲೆ ದೊಡ್ಡ ಪ್ರಭಾವ ಬೀರುತ್ತಿದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರ & ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ರಾಮಚಂದ್ರ ರಾವ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ ಪ್ರಕರಣದ ತನಿಖೆ ಆರಂಭವಾದ ಬಳಿಕ, ಹೆಚ್ಚಿನ ಸಾಕ್ಷ್ಯಗಳ ಸಂಗ್ರಹ ಮತ್ತು ದೂರುದಾರರ ಹೇಳಿಕೆ ದಾಖಲಾದ ಮೇಲೆ ಈ ವಿಚಾರ ಸಂಬಂಧ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ. ಒಟ್ಟಿನಲ್ಲಿ ಈ ಪ್ರಕರಣ ಪೊಲೀಸ್ ಇಲಾಖೆಯ ಒಳಗಿನ ನೈತಿಕತೆಯ ಬಗ್ಗೆ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

Exit mobile version