ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ಹೊಸ ಸಚಿವ ಸಂಪುಟ ರಚನೆಯ ಹೈವೋಲೇಜ್ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಸಂಜೆ 4:05ಕ್ಕೆ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಮೊದಲ ಹಂತದಲ್ಲಿ11 ಪ್ರಮುಖ ನಾಯಕರುಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಪರಮೇಶ್ವರ್ ಏಕೈಕ ಡಿಸಿಎಂ
ಹೊಸ ಸರ್ಕಾರದಲ್ಲಿ ಭಾರಿ ಪೈಪೋಟಿ ಇದ್ದರೂ, ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿ (Sole Deputy CM) ಆಗುವ ಸಾಧ್ಯತೆ ಹೆಚ್ಚಿದೆ. ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ಕೊಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದರು. ಮತ್ತೊಂದೆಡೆ, ಡಿಕೆಶಿ ಅವರು “ಡಿಸಿಎಂ ಹುದ್ದೆ ಬೇಡವೇ ಬೇಡ” ಎಂದು ಪಟ್ಟು ಹಿಡಿದಿದ್ದರು. ಆದರೆ ಕೊನೆಗೂ ಸಿದ್ದರಾಮಯ್ಯ ಒತ್ತಡಕ್ಕೆ ಹೈಕಮಾಂಡ್ ಮಣಿದಿದೆ ಎನ್ನಲಾಗಿದೆ. ಪರಮೇಶ್ವರ್ ಅವರು ನಾಳೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ಯತೀಂದ್ರ ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಸಚಿವ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಹೈಕಮಾಂಡ್‌ನಿಂದ ಅವರಿಗೆ ಸಚಿವ ಸ್ಥಾನದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ.

ಸ್ಪೀಕರ್ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್
ಕರಾವಳಿ ಮತ್ತು ಹಳೆಯ ಮೈಸೂರು ಭಾಗದ ಸಮತೋಲನ ಕಾಯ್ದುಕೊಳ್ಳಲು ಹಿರಿಯ ನಾಯಕ ಹೆಚ್.ಕೆ. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಿಸಲು ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಮೂಲಕ ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಹೈಕಮಾಂಡ್‌ನ ಉದ್ದೇಶವಾಗಿದೆ.

ದೆಹಲಿಯಲ್ಲಿ ಅಂತಿಮ ಸಭೆ
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸುದೀರ್ಘ ಸಭೆ ನಡೆಸಿದ್ದಾರೆ. ಈ ಸಭೆಯಲ್ಲೇ ಸಚಿವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಮಹಿಳಾ ಪ್ರಾತಿನಿಧ್ಯದಲ್ಲಿ ಪೈಪೋಟಿ
ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ವಿಚಾರವಾಗಿ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಪುತ್ರಿ ರೂಪಕಲಾ ಶಶಿಧರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಒಂದು ವೇಳೆ ಹೈಕಮಾಂಡ್ ರೂಪಕಲಾ ಅವರಿಗೆ ಮಣೆ ಹಾಕಿದರೆ, ಒಂದೇ ಕುಟುಂಬದ ಇಬ್ಬರಿಗೆ ಸ್ಥಾನ ನೀಡಬಾರದು ಎಂಬ ನಿಯಮದಡಿ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಅವರು ಸಚಿವ ಸ್ಥಾನದ ರೇಸ್‌ನಿಂದ ಹೊರಗುಳಿಯಬೇಕಾಗಬಹುದು.

ಸತೀಶ್ ಜಾರಕಿಹೊಳಿ ಹಿಂದೇಟು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಆದರೆ ಒಬ್ಬರಿಗೆ ಒಂದೇ ಹುದ್ದೆ ಎಂಬ ಹೈಕಮಾಂಡ್ ನಿಯಮದಂತೆ ಅಧ್ಯಕ್ಷ ಪಟ್ಟ ಸಿಕ್ಕರೆ ಸಚಿವ ಸ್ಥಾನ ತ್ಯಜಿಸಬೇಕಾಗುತ್ತದೆ. ಈ ಕಾರಣಕ್ಕೆ ಅವರು ಸಚಿವ ಸ್ಥಾನಕ್ಕೇ ಒಲವು ತೋರಿದ್ದಾರೆ. ಹೀಗಾಗಿ ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

 ನಾಳಿನ ಪ್ರಮಾಣವಚನ ಸಮಾರಂಭ
ನಾಳಿನ ಐತಿಹಾಸಿಕ ಪ್ರಮಾಣ ವಚನ ಸಮಾರಂಭಕ್ಕೆ ರಾಹುಲ್ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ವಿವಿಧ ರಂಗಗಳ ಗಣ್ಯರು ಸಾಕ್ಷಿಯಾಗಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಸ್ಟೇಡಿಯಂನಲ್ಲಿ ಈ ಸಮಾರಂಭ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

 

Exit mobile version