ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರದ ಮಹತ್ವದ ಸಭೆ ಶನಿವಾರ ವಿಧಾನಸೌಧದಲ್ಲಿ ಜರುಗಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೆಮ್ಮೆಯಿಂದ ಪ್ರಕಟಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ನ ನಿರ್ದೇಶನದಂತೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಲಾಗಿತ್ತು. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಎಲ್ಲಾ ಶಾಸಕರು ಸರ್ವಾನುಮತದಿಂದ ಬೆಂಬಲ ವ್ಯಕ್ತಪಡಿಸಿದರು ಎಂದು ತಿಳಿಸಿದರು. ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಜೂನ್ 3ರಂದು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವೇಣುಗೋಪಾಲ್ ಮಾಹಿತಿ ನೀಡಿದರು.
ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಅಥವಾ ರಾಜಕೀಯ ಅಸ್ಥಿರತೆ ಉಂಟಾಗಬಹುದು ಎಂಬ ನಿರೀಕ್ಷೆಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗಿದ್ದವು. ಆದರೆ ಈ ಎಲ್ಲ ಊಹಾಪೋಹಗಳಿಗೆ ಕಾಂಗ್ರೆಸ್ ನಾಯಕತ್ವವೇ ಉತ್ತರ ನೀಡಿದೆ ಎಂದು ಅವರು ಹೇಳಿದರು.
“ನಮ್ಮ ಪಕ್ಷ ಒಂದು ಕುಟುಂಬದಂತಿದೆ. ಸಿದ್ದರಾಮಯ್ಯ ಅವರ ಮುಂದಿನ ನಡೆ ಏನಾಗಲಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆದರೆ ಅವರು ಆರಂಭದಿಂದಲೇ ಕಾಂಗ್ರೆಸ್ ಪಕ್ಷ ಮತ್ತು ಹೈಕಮಾಂಡ್ನ ನಿರ್ಧಾರವೇ ತಮ್ಮ ಆದ್ಯತೆ ಎಂದು ಸ್ಪಷ್ಟಪಡಿಸಿದ್ದರು. ಈಗ ತಮ್ಮ ನಡೆ ಮೂಲಕವೂ ಅದನ್ನು ಸಾಬೀತುಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಏಕತೆ ಮತ್ತು ಸಂಘಟಿತ ಶಕ್ತಿಗೆ ಉತ್ತಮ ಉದಾಹರಣೆಯಾಗಿದೆ,” ಎಂದು ವೇಣುಗೋಪಾಲ್ ಹೇಳಿದರು.
ಇದೇ ವೇಳೆ, ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಆಡಳಿತ ಮತ್ತು ಸೇವೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶ್ಲಾಘಿಸಲಾಯಿತು ಎಂದು ತಿಳಿಸಿದರು. ಸಿದ್ದರಾಮಯ್ಯ ಅವರ ಆಡಳಿತ ಸಾಧನೆಗಳನ್ನು ಪ್ರಶಂಸಿಸುವ ನಿರ್ಣಯವನ್ನು ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಮಂಡಿಸಿದ್ದು, ಸಭೆಯಲ್ಲಿ ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
“ಇದು ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆಯ ಕ್ಷಣವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಈ ಅಧಿಕಾರ ಹಸ್ತಾಂತರ ಸುಗಮವಾಗಿ ನಡೆದಿದೆ. ನಾಯಕತ್ವ ಬದಲಾವಣೆ ಪಕ್ಷದ ಸಂಘಟನಾ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ,” ಎಂದು ಅವರು ಅಭಿಪ್ರಾಯಪಟ್ಟರು.
ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಕೆಲಸ ಮಾಡುವ ಮೂಲಕ ಸರ್ಕಾರ ಮತ್ತು ಪಕ್ಷವನ್ನು ಮತ್ತಷ್ಟು ಬಲಪಡಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ ವೇಣುಗೋಪಾಲ್, ರಾಜ್ಯದಲ್ಲಿ ಕಾಂಗ್ರೆಸ್ಗೆ ಜನರ ಬೆಂಬಲ ಇನ್ನಷ್ಟು ವೃದ್ಧಿಯಾಗಲಿದೆ ಎಂದರು.
“ಸಿದ್ದರಾಮಯ್ಯ ಅವರ ಅನುಭವ ಮತ್ತು ಬೆಂಬಲದೊಂದಿಗೆ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳು ಮತ್ತು ಸಂಘಟನೆಯ ಕಾರ್ಯಪದ್ಧತಿ ಜನರಲ್ಲಿ ವಿಶ್ವಾಸ ಮೂಡಿಸಲಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ನಮಗಿದೆ,” ಎಂದು ಭವಿಷ್ಯ ನುಡಿದರು.





