ರಾಮನಗರ, ಜುಲೈ 1: ಬಿಡದಿ ಟೌನ್ಶಿಪ್ ಯೋಜನೆ ಕುರಿತ ರಾಜಕೀಯ ವಾಗ್ವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿಕೆಶಿ, ಈ ಯೋಜನೆ ಹೊಸದಾಗಿ ತಮ್ಮ ಸರ್ಕಾರ ರೂಪಿಸಿರುವುದಲ್ಲ ಎಂದು ಸ್ಪಷ್ಟಪಡಿಸಿದರು.
- ಬಿಡದಿ ಟೌನ್ಶಿಪ್ ಯೋಜನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಚರ್ಚೆಗೆ ಆಹ್ವಾನಿಸಿದ್ದರೂ ಕುಮಾರಸ್ವಾಮಿ ಬಂದಿರಲಿಲ್ಲ ಎಂದ ಸಿಎಂ
- ಯಾವುದೇ ಗ್ರಾಮವನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದ ಡಿ.ಕೆ. ಶಿವಕುಮಾರ್
- ರೈತರಿಗೆ ಸೂಕ್ತ ಹಾಗೂ ಹೆಚ್ಚುವರಿ ಪರಿಹಾರ ನೀಡುವ ಭರವಸೆ
“ಬಿಡದಿಯಲ್ಲಿ ಕೈಗಾರಿಕಾ ಟೌನ್ಶಿಪ್ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು ಹಿಂದಿನ ಸರ್ಕಾರಗಳ ಅವಧಿಯಲ್ಲೇ. ನಾನು ಈ ಯೋಜನೆ ಆರಂಭ ಮಾಡಿಲ್ಲ. ಆಗ ಅಧಿಕಾರದಲ್ಲಿದ್ದವರು ಅದನ್ನು ಡಿನೋಟಿಫೈ ಮಾಡಬೇಕಿತ್ತು. ಆದರೆ ಆ ಅವಕಾಶ ಇದ್ದಾಗ ಅದನ್ನು ಮಾಡಲಿಲ್ಲ. ಈಗ ಅದರ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಈ ವಿಷಯದ ಕುರಿತು ಚರ್ಚೆ ನಡೆಸಲು ನಾನು ಈ ಹಿಂದೆ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದೆ. ಆದರೆ ಆಗ ಅವರು ಬಂದಿರಲಿಲ್ಲ. “ನಾನು ಕರೆದಾಗ ಬರಲಿಲ್ಲ. ಈಗ ಅವರು ಕರೆಯುತ್ತಿದ್ದಾರೆ. ಈಗ ಮತ್ತೆ ಚರ್ಚೆ ಮಾಡುವ ಅಗತ್ಯವೇ ಇಲ್ಲ” ಎಂದು ಸಿಎಂ ಹೇಳಿದರು.
ಬಿಡದಿ ಟೌನ್ಶಿಪ್ ಯೋಜನೆಯಿಂದ ಯಾವುದೇ ಗ್ರಾಮವನ್ನು ಸ್ಥಳಾಂತರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಯಾವ ಊರನ್ನೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದರು. ಎಲ್ಲ ಗ್ರಾಮಗಳು ಇದ್ದಲ್ಲೇ ಇರುತ್ತವೆ. ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಪ್ರತ್ಯೇಕ ರಿಂಗ್ರೋಡ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ” ಎಂದು ತಿಳಿಸಿದರು.
ಭೂಸ್ವಾಧೀನಕ್ಕೆ ಒಳಗಾಗುವ ರೈತರಿಗೆ ಸರ್ಕಾರ ನ್ಯಾಯಯುತ ಪರಿಹಾರ ನೀಡಲಿದೆ ಎಂದು ಭರವಸೆ ನೀಡಿದ ಸಿಎಂ ಶಿವಕುಮಾರ್, ಈಗಾಗಲೇ ಕೆಲವು ಗ್ರಾಮಗಳ ಅಧಿಸೂಚನೆ ಪೂರ್ಣಗೊಂಡಿದ್ದು, ಮಾರುಕಟ್ಟೆ ಬೆಲೆಗೆ ತಕ್ಕಂತೆ ಹಾಗೂ ಅಗತ್ಯವಿದ್ದಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯಾದಂತೆ, ಬಿಡದಿ ಟೌನ್ಶಿಪ್ ಯೋಜನೆಯಿಂದ ರಾಮನಗರ, ಮಾಗಡಿ, ಕನಕಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ಉದ್ಯೋಗ, ಹೂಡಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಲಾಭ ದೊರೆಯಲಿದೆ ಎಂದು ಅವರು ಹೇಳಿದರು.
“ಈ ಯೋಜನೆಯ ಉದ್ದೇಶ ರಾಜಕೀಯವಲ್ಲ. ರೈತರ ಹಿತಾಸಕ್ತಿ ಕಾಪಾಡುವುದು ಮತ್ತು ಪ್ರದೇಶದ ಅಭಿವೃದ್ಧಿಯೇ ನಮ್ಮ ಗುರಿ ಎಂದು ತಿಳಿಸಿದರು. ಹಿಂದಿನ ಸರ್ಕಾರಗಳ ಕಾಲದಿಂದ ಇದ್ದ ಯೋಜನೆಯನ್ನು ಈಗ ಜನರ ಹಿತದೃಷ್ಟಿಯಿಂದ ಅನುಷ್ಠಾನಗೊಳಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.





