ಬೆಂಗಳೂರು: “ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ” ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಕ್ಬಾಲ್ ಹುಸೇನ್ ಅವರ ಮಾತುಗಳನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ. “ಇಕ್ಬಾಲ್ ಹುಸೇನ್ ಅವರಿಗೆ ಮಾತಿನ ಚಟ ಇದೆ. ಅವರು ಯಾವಾಗ ಏನು ಹೇಳುತ್ತಾರೆ ಎಂಬುದೇ ಅವರಿಗೆ ಗೊತ್ತಿಲ್ಲ. ಅವರ ಹೇಳಿಕೆಗೆ ಯಾವುದೇ ಮಹತ್ವ ನೀಡಬೇಕಾಗಿಲ್ಲ” ಎಂದು ಡಿಕೆಶಿ ಕಿಡಿಕಾರಿದರು.
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ನಿರ್ದಿಷ್ಟ ದಿನಾಂಕವನ್ನು ಉಲ್ಲೇಖಿಸಿ ಅನಾವಶ್ಯಕ ಹೇಳಿಕೆ ನೀಡುವುದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ತೀರ್ಮಾನಗಳು ಪಕ್ಷದ ಹೈಕಮಾಂಡ್ ಕೈಯಲ್ಲಿವೆ ಎಂದು ಅವರು ತಿಳಿಸಿದರು.
“ಮುಖ್ಯಮಂತ್ರಿ ಸ್ಥಾನ ಯಾರಿಗೆ, ಯಾವಾಗ ಎಂಬುದನ್ನು ಪಕ್ಷದ ನಾಯಕತ್ವವೇ ನಿರ್ಧರಿಸುತ್ತದೆ. ಶಾಸಕರು ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಮಾತುಗಳಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಅಧಿವೇಶನ ಮುಗಿದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಬೆಳಗಾವಿ: “ಅಧಿವೇಶನ ಮುಗಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.
ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿರುವುದರಿಂದ ರಾಜಕೀಯ ವಾತಾವರಣ ಚುರುಕುಗೊಂಡಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ. ಶಿವಕುಮಾರ್ ಅವರ ಶ್ರಮ, ಸಂಘಟನೆಗೆ ಮಾಡಿದ ಕೊಡುಗೆ ಹಾಗೂ ಪಕ್ಷದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ವಿವರಿಸಿ, “ಅವರಿಗೆ ಫಲ ಸಿಗಲೇಬೇಕು, ಈ ಬಾರಿ ಅದು ಖಚಿತವಾಗಿ ಸಿಗುತ್ತದೆ” ಎಂದು ಹೇಳಿದರು.
“ ಶಾಸಕರ ಸಂಖ್ಯೆಯೇ ಮುಖ್ಯವಲ್ಲ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ದೇಶನವೇ ಅಂತಿಮ. ಹೈಕಮಾಂಡ್ ತೀರ್ಮಾನ ಮಾಡಿದರೆ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಯಾವುದೇ ಅಡ್ಡಿ ಇಲ್ಲ. ಅಧಿವೇಶನ ಮುಗಿದ ತಕ್ಷಣವೇ ಬದಲಾವಣೆ ಆಗುವ ಸಾಧ್ಯತೆ ಇದೆ” ಎಂದು ಹೇಳಿದರು.
ಸಂಕ್ರಾಂತಿಯ ವೇಳೆಗೆ ಬದಲಾವಣೆಯಾಗುತ್ತದೆ ಎಂಬ ಮಾತುಗಳನ್ನು ತಳ್ಳಿ ಹಾಕಿ, “ಅಧಿವೇಶನ ಮುಗಿದ ಕೂಡಲೇ” ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.





