ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

Untitled design 2026 06 03T231508.336

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ಸಮಯದಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಕಡೆಗೂ ತೆರೆ ಬಿದ್ದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ (ಡಿಕೆಶಿ) ಅವರ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಹಲವು ಮಹತ್ವದ ಬದಲಾವಣೆಗಳಾಗಲಿವೆ ಎಂಬ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿ ಮನೆಮಾಡಿದೆ.

ಒಪ್ಪಂದದಂತೆ ಒಲಿದ ಸಿಎಂ ಗದ್ದುಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ “ಡಿಕೆಶಿ ಯಾವಾಗ ಸಿಎಂ ಆಗ್ತಾರೆ?” ಎಂಬ ಪ್ರಶ್ನೆ ಅವರ ಅಭಿಮಾನಿಗಳನ್ನು ಮತ್ತು ರಾಜಕೀಯ ವಲಯವನ್ನು ಕಾಡುತ್ತಿತ್ತು. ಕಳೆದ ಬಾರಿ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿಯೇ ಹೈಕಮಾಂಡ್ ಸಮ್ಮುಖದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು ಎನ್ನಲಾಗಿದೆ. ಅದರಂತೆ ಮೊದಲ 2.5 ವರ್ಷ ಸಿದ್ದರಾಮಯ್ಯ ಹಾಗೂ ಉಳಿದ ಅವಧಿಗೆ ಡಿಕೆಶಿ ಸಿಎಂ ಆಗಲಿದ್ದಾರೆ ಎಂಬ ಚರ್ಚೆಗಳು ರಾಷ್ಟ್ರೀಯ ಮಾಧ್ಯಮಗಳಲ್ಲೂ ಮುಂಚೂಣಿಗೆ ಬಂದಿದ್ದವು. ಇದೀಗ ಹೈಕಮಾಂಡ್ ಕೊಟ್ಟ ಮಾತಿನಂತೆಯೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಸಾರಥಿಯಾಗಿ ಪದಗ್ರಹಣ ಮಾಡಿದ್ದಾರೆ. ಇದು ಅವರ ಅಭಿಮಾನಿ ಬಳಗದಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಡಿಕೆಶಿ ಸೈನ್ಯದಲ್ಲಿ ಘಟಾನುಘಟಿಗಳು

ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಲಾಗಿದೆ. ಇದರೊಂದಿಗೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಡಿಸಿಎಂ ಪಟ್ಟ ಒಲಿದಿದೆ. ಇನ್ನು ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಆಡಳಿತದಲ್ಲಿ ಮತ್ತಷ್ಟು ಆಮೂಲಾಗ್ರ ಬದಲಾವಣೆಗಳಾಗುವ ಮುನ್ಸೂಚನೆ ಸಿಕ್ಕಿದೆ.

ಹೊಸ ಸರ್ಕಾರದ ‘ಬಂಪರ್’ ಕೊಡುಗೆಗಳು ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮುಂದುವರಿಕೆಯ ಜೊತೆಗೆ, ಡಿಕೆಶಿ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ಸಾರ್ವಜನಿಕರಿಗೆ ಕೆಲವು ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಪ್ರಕಟಿಸಲಾಗಿದೆ.
ಬಿ-ಖಾತಾ ವರ್ಗಾವಣೆ: ಬಹುದಿನಗಳ ಬೇಡಿಕೆಯಾಗಿದ್ದ ‘ಬಿ’ ಖಾತಾದಿಂದ ‘ಎ’ ಖಾತಾಗೆ ಆಸ್ತಿ ವರ್ಗಾವಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ರಸ್ತೆ ಅಭಿವೃದ್ಧಿಗೆ ಅನುದಾನ: ರಾಜ್ಯದ ರಸ್ತೆಗಳ ದುರಸ್ತಿ ಮತ್ತು ಮೂಲಸೌಕರ್ಯ ಮೇಲ್ದರ್ಜೆಗೆ ಏರಿಸಲು ಭಾರಿ 2,000 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ.

ಖಾತೆ ಹಂಚಿಕೆ ಕುರಿತು ಕುತೂಹಲ ಸದ್ಯಕ್ಕೆ ಪ್ರಮುಖ ನಾಯಕರು ಅಧಿಕಾರ ವಹಿಸಿಕೊಂಡಿದ್ದರೂ, ಸಂಪುಟದ ಹಲವು ಸಚಿವ ಸ್ಥಾನಗಳು ಇನ್ನೂ ಭರ್ತಿಯಾಗಬೇಕಿದೆ. ಮುಂಬರುವ ಪಟ್ಟಿಯಲ್ಲಿ ಮಹಿಳಾ ಶಾಸಕರಿಗೆ ಹೆಚ್ಚಿನ ಆದ್ಯತೆ ಸಿಗಲಿದೆಯೇ ಮತ್ತು ಉಳಿದ ಖಾತೆಗಳು ಯಾರ ಪಾಲಾಗಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.

Exit mobile version