ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,991 ಸಿಎಆರ್‌ (CAR) ಮತ್ತು ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಲಿಖಿತ ಪರೀಕ್ಷೆ ಭಾನುವಾರ ರಾಜ್ಯಾದ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಬಿಗಿ ಭದ್ರತೆಯ ನಡುವೆ ಪರೀಕ್ಷೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಪರೀಕ್ಷೆಯಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕೆಇಎ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪುವಂತೆ ಬೆಂಗಳೂರು ಸಂಚಾರ ಪೊಲೀಸರು ಕೂಡ ಸೂಕ್ತ ಸಂಚಾರ ನಿರ್ವಹಣೆ ಹಾಗೂ ಮಾರ್ಗದರ್ಶನ ವ್ಯವಸ್ಥೆ ಮಾಡಿದ್ದರು. ಇದರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಉಂಟಾಗಬಹುದಾದ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಯಿತು.

1.14 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಾಜರಿ

ಈ ಬಾರಿ ಮಿಕ್ಕುಳಿದ ವೃಂದದ (RPC) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ರಾಜ್ಯದ 16 ಜಿಲ್ಲೆಗಳ 309 ಪರೀಕ್ಷಾ ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,42,220 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 1,14,079 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಶೇ.80ರಷ್ಟು ಹಾಜರಾತಿ ದಾಖಲಾಗಿದೆ.

ಇದೇ ವೇಳೆ ಕಲ್ಯಾಣ ಕರ್ನಾಟಕ ವೃಂದದ (KK) ಅಭ್ಯರ್ಥಿಗಳಿಗಾಗಿ ನಾಲ್ಕು ಜಿಲ್ಲೆಗಳ 60 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಯಿತು. ಈ ವಿಭಾಗದಲ್ಲಿ ಒಟ್ಟು 32,191 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, 28,849 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇಲ್ಲಿ ಶೇ.90ರಷ್ಟು ಹಾಜರಾತಿ ದಾಖಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

ವೆಬ್‌ಕಾಸ್ಟಿಂಗ್ ಮೂಲಕ ಹದ್ದಿನ ಕಣ್ಣು

ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಕಮಾಂಡ್ ಸೆಂಟರ್‌ನಿಂದಲೇ ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್‌ಕಾಸ್ಟಿಂಗ್ ಮೂಲಕ ನಿರಂತರ ನಿಗಾ ಇರಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪ್ರತಿಯೊಂದು ಪ್ರಕ್ರಿಯೆಯ ಮೇಲೂ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದರು.

ಪರೀಕ್ಷೆ ಮುಕ್ತಾಯಗೊಂಡ ತಕ್ಷಣ ಅಭ್ಯರ್ಥಿಗಳ ಒಎಂಆರ್‌ ಉತ್ತರ ಪತ್ರಿಕೆಗಳನ್ನು ಕೆಇಎಗೆ ತಲುಪಿಸಿ, ಅವುಗಳನ್ನು ಸ್ಕ್ಯಾನ್ ಮಾಡುವ ಕಾರ್ಯ ಆರಂಭಿಸಲಾಯಿತು. ಬಳಿಕ ಅಧಿಕೃತ ವೆಬ್‌ಸೈಟ್‌ನಲ್ಲಿ ಒಎಂಆರ್ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಮಾತ್ರವಲ್ಲದೆ ಸಾರ್ವಜನಿಕರೂ ಈ ಒಎಂಆರ್ ಪ್ರತಿಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಬಳ್ಳಾರಿಯಲ್ಲೂ ಬಿಗಿ ಭದ್ರತೆ

ಸಿಎಆರ್‌ ಮತ್ತು ಡಿಎಆರ್‌ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಬಳ್ಳಾರಿ ಜಿಲ್ಲೆಯಲ್ಲೂ ಯಾವುದೇ ಗೊಂದಲವಿಲ್ಲದೆ ನಡೆಯುವಂತೆ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ಅವಧಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಪರೀಕ್ಷೆಗೆ ಆಗಮಿಸಿದ ಅಭ್ಯರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು. ಒಟ್ಟಾರೆ ರಾಜ್ಯಾದ್ಯಂತ ಬಿಗಿ ಭದ್ರತೆ, ಕಟ್ಟುನಿಟ್ಟಿನ ನಿಯಮಗಳು ಹಾಗೂ ಪಾರದರ್ಶಕ ವ್ಯವಸ್ಥೆಯ ನಡುವೆ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

Exit mobile version