ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ: ಇಸಿಐ ವಿರುದ್ದ ಸಿಎಂ ಸಿದ್ದು ಗರಂ

Untitled design 2025 11 05t165151.136

ಬೆಂಗಳೂರು: ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಜೊತೆಗೂಡಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುಟೀಕೆ ಮಾಡಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಹಿರಂಗಪಡಿಸಿದ ದಾಖಲೆಗಳನ್ನು ಉಲ್ಲೇಖಿಸಿದ ಅವರು, ಹರಿಯಾಣ ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದರು.

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ ಮತ್ತು ಅಳಂದ ವಿಧಾನಸಭಾ ಕ್ಷೇತ್ರಗಳ ಮತಗಳ್ಳತನವನ್ನು ಬಯಲುಮಾಡಿದ ರಾಹುಲ್, ಈಗ ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಲಾಗಿದೆ ಎಂಬುದನ್ನು ದಾಖಲೆಗಳ ಸಹಿತ ಜನರ ಮುಂದಿರಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.


ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ, ಲೋಕತಂತ್ರದ ಕತ್ತು ಹಿಸುಕುತ್ತಿದೆ ಎಂದು ಸಿಎಂ ಸಿಡಿದಿದ್ದಾರೆ.ಇದಕ್ಕೆ ರಾಹುಲ್‌ಗಾಂದಿ ತೋರಿಸಿರುವ ದಾಖಲೆಗಳೇ ಸಾಕ್ಷಿ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ನಾಗರಿಕರ ಹೆಸರುಗಳನ್ನು ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ಆರೋಪಿಸಿದ ಅವರು, “ಬ್ರೆಜಿಲ್ ದೇಶದ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಸಿಕೊಂಡಿರುವುದು ಅವರ ನಿರ್ಲಜ್ಜತೆಗೆ ಸಾಕ್ಷಿ. ಈ ಕುತಂತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಖಚಿತ” ಎಂದು ಕಿಡಿಕಾರಿದ್ದಾರೆ.

ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಹರಿಯಾಣದ ಮತದಾರರು ಕೂಡ ಬಿಜೆಪಿ ಸರ್ಕಾರವನ್ನು ಬದಲಾಯಿಸಲು ದೃಢ ಸಂಕಲ್ಪ ಮಾಡಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಹೇಗೆ ಬಹುಮತ ಪಡೆಯಿತು ಎಂಬ ಪ್ರಶ್ನೆಗೆ ಈ ಮತಗಳ್ಳತನದ ಆರೋಪಗಳೇ ಉತ್ತರ ನೀಡುತ್ತವೆ ಎಂದು ಸಿದ್ದರಾಮಯ್ಯ ಸೂಚಿಸಿದರು. ಈ ಅನುಮಾನಕ್ಕೆ ರಾಹುಲ್ ಗಾಂಧಿಯವರು ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ ಎಂದರು.

ತಮ್ಮ ಮೇಲಿನ ಆರೋಪಗಳಿಗೆ ಓರೆಕೋರೆಯಾಗಿ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಾ ಸಿಎಂ ಸಿದ್ದರಾಮಯ್ಯ ಉದ್ದೇಶಿಸಿ, “ಈ ಬಾರಿಯಾದರೂ ಅವರು ತಮ್ಮ ‘ಮಾಲೀಕರ’ ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ, ಸತ್ಯವನ್ನು ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಟೀಕೆ ಮಾಡಿದ್ದಾರೆ. ಚುನಾವಣಾ ಆಯೋಗದ ವರ್ತನೆಗೆ ಕಟು ಟೀಕೆ ಮಾಡಿದರು. ಈ ವಿವಾದದ ಸತ್ಯಾಸತ್ಯತೆ ಕಂಡುಹಿಡಿಯುವಂತೆ ಮತ್ತು ಕ್ರಮ ಜರುಗಿಸುವಂತೆ ಚುನಾವಣಾ ಆಯೋಗವನ್ನು ಕೋರಲಾಗಿದೆ.

Exit mobile version