ಮದ್ಯ ಮಾರಾಟಕ್ಕೆ ನಿರ್ದಿಷ್ಟ ಗುರಿ ನಿಗದಿಪಡಿಸಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ

Untitled design 2025 12 10T080411.544

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ, ಅಬಕಾರಿ ಇಲಾಖೆಗೆ ಯಾವುದೇ ನಿರ್ದಿಷ್ಟ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಗುರಿ (Target) ಯನ್ನು ನಿಗದಿಪಡಿಸಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ವಿಧಾನ ಸಭೆಯಲ್ಲಿ ಸ್ಪಷ್ಟಪಡಿಸಿದರು. ಆದಾಗ್ಯೂ, ಮದ್ಯ ಮಾರಾಟದಿಂದ ಇಂತಿಷ್ಟು ಪ್ರಮಾಣದ ಆದಾಯ ಸಂಗ್ರಹವಾಗಬಹುದು ಎಂಬ ನಿರೀಕ್ಷೆಯನ್ನು ಮಾತ್ರ ಇಲಾಖೆ ಹೊಂದಿದೆ ಎಂದು ಅವರು ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಿನ್ನೆ ನಡೆದ ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪವಾಯಿತು. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು  ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದನ್ನು ಉಲ್ಲೇಖಿಸಿದರು. ಇದರಿಂದಾಗಿ ವಯಸ್ಕರಷ್ಟೇ ಅಲ್ಲದೆ, ಮಕ್ಕಳು ಕೂಡ ಕುಡಿತದ ದಾಸರಾಗುತ್ತಿದ್ದಾರೆ. ಈ ಪರಿಸ್ಥಿತಿ ಮಹಿಳೆಯರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೀರಿ. ನಮ್ಮದು ಮಹಿಳೆಯರ ಪರ ಸರ್ಕಾರ ಎಂದು ಹೇಳುತ್ತೀರಿ. ಆದರೆ, ಈ ಅಕ್ರಮ ಮದ್ಯ ಮಾರಾಟದಿಂದಾಗಿ ಮಹಿಳೆಯರೇ ತೊಂದರೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ, ಸರ್ಕಾರವು ತಕ್ಷಣವೇ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು ಮತ್ತು ಹೆಚ್ಚಿನ ಆದಾಯ ಸಂಗ್ರಹಿಸುವ ಉದ್ದೇಶದಿಂದ ಇಂತಿಷ್ಟೇ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡಬೇಕು ಎಂದು ಗುರಿ ನಿಗದಿ ಮಾಡುವ ನೀತಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಸಿ.ಬಿ. ಸುರೇಶ್‌ಗೆ ಉತ್ತರಿಸಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಮದ್ಯ ಮಾರಾಟಕ್ಕೆ ಯಾವುದೇ ಮಾರಾಟದ ಗುರಿ ನಿಗದಿಪಡಿಸಿಲ್ಲ ಎಂಬುದನ್ನು ಪುನರುಚ್ಚರಿಸಿದರು. ಆದರೆ, ಅಕ್ರಮ ಮದ್ಯ ಮಾರಾಟದ ಪಿಡುಗನ್ನು ನಿಯಂತ್ರಿಸಲು ಇಲಾಖೆಯು ತೆಗೆದುಕೊಂಡಿರುವ ಕ್ರಮಗಳ ಕುರಿತು ವಿವರ ನೀಡಿದರು.

ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ವಾಹನಗಳನ್ನ ತಪಾಸಣೆ ಮಾಡಲಾಗುತ್ತದೆ. ಅಕ್ರಮ ಸಾಗಣೆ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಇಲಾಖೆಯು ಸಂಪೂರ್ಣವಾಗಿ ಬದ್ಧವಾಗಿದೆ. ಈ ಪಿಡುಗನ್ನು ನಿಯಂತ್ರಿಸಲು ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Exit mobile version